ಸಾಂದರ್ಭಿಕ ಚಿತ್ರ
ಬೆಂಗಳೂರು: ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿದ್ದ ನಾಮಫಲಕಗಳನ್ನು ಜಪ್ತಿ ಮಾಡಿರುವ ಪೂರ್ವ ಸಂಚಾರ ವಿಭಾಗದ ಪೊಲೀಸರು 26 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಮ್ಮಲೂರು ರಸ್ತೆ, ಹಲಸೂರು ಮುಖ್ಯರಸ್ತೆ, ಇಂದಿರಾನಗರ 100 ಅಡಿ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಎಂ.ರಸ್ತೆ, ಆಯಿಲ್ ಮಿಲ್ ರಸ್ತೆ, ಸೆಂಟ್ ಜಾನ್ಸ್ ರಸ್ತೆ, ಗೋವಿಂದಪುರ ಮುಖ್ಯರಸ್ತೆ, ರಾಮಮೂರ್ತಿ ನಗರ ಮುಖ್ಯರಸ್ತೆ, ಪಣತ್ತೂರು ಮುಖ್ಯರಸ್ತೆ, ಚನ್ನಸಂದ್ರ ಮುಖ್ಯರಸ್ತೆ, ಕಾಡುಗೋಡಿ ಮುಖ್ಯರಸ್ತೆ, ಮತ್ತು ಐಟಿಪಿಎಲ್ ಮುಖ್ಯ ರಸ್ತೆಗಳಲ್ಲಿರುವ ಅಂಗಡಿ ಮಾಲೀಕರು ಪಾದಚಾರಿ ಮಾರ್ಗದಲ್ಲಿ ತಮ್ಮ ಅಂಗಡಿಯ ನಾಮಫಲಕಗಳನ್ನು ಹಾಕಿಕೊಂಡಿದ್ದರು.
ಇದರಿಂದಾಗಿ ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆ ಆಗಿತ್ತು. ಕಾರ್ಯಾಚರಣೆ ಕೈಗೊಂಡು ನಾಮಫಲಕಗಳನ್ನು ತೆರವುಗೊಳಿಸಿ, ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಹಲವು ಬಾರಿ ಸೂಚನೆ ನೀಡಿದ್ದರೂ ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಪಾದಚಾರಿ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳನ್ನು ಇಟ್ಟುಕೊಂಡು ತೊಂದರೆ ಉಂಟು ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿ ಬಿಎನ್ಎಸ್ಎಸ್ ಕಲಂ 126 ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೂರ್ವ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.