ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಡೆಲಿವರಿ ಬಾಯ್ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ನಾಗಸಂದ್ರ ಮೆಟ್ರೊ ನಿಲ್ದಾಣ ಸಮೀಪದ ಪೀಣ್ಯ ಮೇಲ್ಸೇತುವೆ ಮೇಲೆ ಸಂಭವಿಸಿದ ಅಪಘಾತದಲ್ಲಿ ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಶಶಿಕುಮಾರ್ (26) ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಶಶಿಕುಮಾರ್, ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಕೆಲಸದ ನಿಮಿತ್ತ ಮಾದನಾಯಕನಹಳ್ಳಿಯಿಂದ ನಗರಕ್ಕೆ ಮುಂಜಾನೆ 6.30ರಲ್ಲಿ ನಾಗಸಂದ್ರ ಮೆಟ್ರೊ ಸ್ಟೇಷನ್ ಸಮೀಪ ಪೀಣ್ಯ ಮೇಲ್ಸೇತುವೆ ಮೇಲೆ ಬರುತ್ತಿದ್ದಾಗ ಹಿಂದಿನಿಂದ ಅತಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಚಾಲಕ ವಾಹನ ನಿಲ್ಲಿಸಿಲ್ಲ. ಸ್ಥಳಕ್ಕೆ ಪೀಣ್ಯ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪರಿಚಿತ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೈಕ್ ಸವಾರ ಸಾವು: ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಾಮು (38) ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಕ್ಯಾಂಟರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದು, ನಿಲ್ಲಿಸದೇ ಪರಾರಿಯಾಗಿದ್ದು, ಹಿಂಬದಿ ಸವಾರ ಹರೀಶ್ ಗಾಯಗೊಂಡಿದ್ದಾರೆ. ಹರೀಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.