ಬೆಂಗಳೂರು: ಬಸವನಗುಡಿಯ ವಿದ್ಯಾಪೀಠ ವೃತ್ತದಿಂದ ಸೀತಾ ವೃತ್ತದ ಮಾರ್ಗವಾಗಿ ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದ್ದು, ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ಅಧ್ವಾನಗೊಂಡಿವೆ. ಮುಖ್ಯ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದ್ದು, ದಟ್ಟಣೆ ಅವಧಿಯಲ್ಲಿ ಒಂದು ಕಿ.ಮೀ. ಸಂಚರಿಸಲು ಕನಿಷ್ಠ 20 ನಿಮಿಷ ಬೇಕಾಗುತ್ತದೆ.
ಈ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದೆ. ಇದಕ್ಕಾಗಿ ಬೆಸ್ಕಾಂನವರು ಭೂಗತ ಕೇಬಲ್ ಹಾಗೂ ಜಲಮಂಡಳಿಯವರು ಕೊಳವೆಗಳನ್ನು ಅಳವಡಿಸಲು ಎರಡೂ ಬದಿಯ ಪಾದಚಾರಿ ಮಾರ್ಗಗಳಲ್ಲಿ ಚರಂಡಿ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ಗಳು ಹಾಗೂ ಪೇವರ್ಸ್ಗಳನ್ನು ತೆಗೆದಿದ್ದಾರೆ. ಕೆಲವು ಕಡೆ ಗುಂಡಿಗಳನ್ನು ತೋಡಲಾಗಿದೆ. ಗುಂಡಿ ಹಾಗೂ ಸ್ಲ್ಯಾಬ್ಗಳನ್ನು ತೆಗೆದಿರುವ ಜಾಗದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸುರಕ್ಷತೆಗಾಗಿ ಇಟ್ಟಿರುವ ಬ್ಯಾರಿಕೇಡ್ಗಳು ಗುಂಡಿಯೊಳಗೆ ಬಿದ್ದಿವೆ.
ಇನ್ನೊಂದು ಕಡೆಯ ರಸ್ತೆ ಬದಿಯಲ್ಲಿ ಪಾದಚಾರಿ ಮಾರ್ಗವೂ ಸೇರಿದಂತೆ ಅಲ್ಲಲ್ಲಿ ಮಣ್ಣಿನ ರಾಶಿ ಹಾಕಲಾಗಿದೆ. ಹೀಗಾಗಿ ನಡೆದಾಡುವವರು ಪಾದಚಾರಿ ಮಾರ್ಗವನ್ನು ದಾಟಲಾಗದೇ ಮುಖ್ಯ ರಸ್ತೆಯಲ್ಲೇ ಹಾದು ಹೋಗಬೇಕು. ಈ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನು ಲೆಕ್ಕಿಸದ ದ್ವಿಚಕ್ರ ವಾಹನ ಸವಾರರು, ಆಟೊ ಚಾಲಕರು ವಿರುದ್ಧ ದಿಕ್ಕಿನಲ್ಲಿ ಇದೇ ರಸ್ತೆಯಲ್ಲಿ ಬರುತ್ತಾರೆ. ಸಂಚಾರ ದಟ್ಟಣೆಗೆ ಇದೇ ಮುಖ್ಯ ಕಾರಣ. ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆ ಹಾಗೂ ಸಂಜೆ 4ರಿಂದ ರಾತ್ರಿ 8 ಗಂಟೆಯ ಅವಧಿಯೊಳಗೆ ಈ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ ಎಂದು ಸಾರ್ವಜನಿಕರು ದೂರಿದರು.
‘ಇಲ್ಲಿ ಜವಳಿ, ಎಲೆಕ್ಟ್ರಿಕ್ ಉತ್ಪನ್ನಗಳ ಮಳಿಗೆಗಳು ಹಾಗೂ ಹೋಟೆಲ್ಗಳಿವೆ. ಈ ರಸ್ತೆಯಲ್ಲಿ ಬಿಎಂಟಿಸಿ ಬಸ್ಗಳು ಸೇರಿದಂತೆ ಲಾರಿ, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಪ್ರತಿನಿತ್ಯ ಸಂಚಾರ ದಟ್ಟಣೆ ಆಗುತ್ತಿದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವ ಕಾರಣ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಿವೆ. ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳನ್ನು ಕೇಳಿದರೆ, ಜಲಮಂಡಳಿಯ ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಇದರಿಂದ ಕಾಮಗಾರಿ ವಿಳಂಬವಾಗುತ್ತಿದೆ’ ಎಂದು ವ್ಯಾಪಾರಿಗಳು ದೂರಿದರು.
‘ರಸ್ತೆಯನ್ನು ಅಗೆದು, ಬೃಹತ್ ಕೊಳವೆಗಳನ್ನು ತಂದು ಇಡಲಾಗಿದೆ. ಆದರೆ, ಕಾಮಗಾರಿಗೆ ವೇಗ ಸಿಕ್ಕಿಲ್ಲ. ವಾಹನಗಳು ಓಡಾಡಿದಾಗಲೆಲ್ಲ ದೂಳಿನ ಮಜ್ಜನವಾಗುತ್ತಿದೆ’ ಎಂದು ವೃದ್ಧರೊಬ್ಬರು ಅಳಲು ತೋಡಿಕೊಂಡರು.
‘ಬಿಬಿಎಂಪಿ, ಬೆಸ್ಕಾಂ ಹಾಗೂ ಬೆಂಗಳೂರು ಜಲಮಂಡಳಿ ಸಹಭಾಗಿತ್ವದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗಿದೆ. ಜಲಮಂಡಳಿಯಿಂದ ಇಲ್ಲಿ ಕೊಳವೆಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅಡಚಣೆ ಆಗದಂತೆ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಬೆಂಗಳೂರು ಜಲಮಂಡಳಿಯ ಎಂಜಿನಿಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಸಾರ್ವಜನಿಕರು ಏನಂತಾರೆ?
ವೈಟ್ ಟಾಪಿಂಗ್ ಕಾಮಗಾರಿಗಾಗಿ ಈ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗವನ್ನು ಅಗೆದು ಅಲ್ಲಲ್ಲಿ ಮಣ್ಣಿನ ರಾಶಿಗಳನ್ನು ಹಾಕಿದ್ದಾರೆ. ಕೊಳವೆಗಳನ್ನು ರಸ್ತೆಯಲ್ಲಿ ಇಟ್ಟಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಜಲಮಂಡಳಿ ಸಿಬ್ಬಂದಿ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಇದರಿಂದ ನಮ್ಮ ವ್ಯಾಪಾರ–ವಹಿವಾಟು ಕಡಿಮೆಯಾಗಿದ್ದು ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು.
ನೌಶಾದ್ ಜ್ಯೂಸ್ ಅಂಗಡಿ ಮಾಲೀಕ
ಮಳೆಗಾಲದಲ್ಲಿ ಪಾದಚಾರಿ ಮಾರ್ಗವೆಲ್ಲ ಕೆಸರುಗದ್ದೆಯಾಗುತ್ತದೆ. ಮಳೆ ಇಲ್ಲದಿದ್ದಾಗ ದೂಳಿನ ಮಜ್ಜನವಾಗುತ್ತಿದೆ. ಇದರಿಂದ ಹೋಟೆಲ್ ಹಾಗೂ ರೆಸ್ಟೊರೆಂಟ್ಗಳಿಗೆ ಬರುವ ಗ್ರಾಹಕರ ಸಂಖ್ಯೆಯೂ ಕಡಿಮೆ ಆಗಿದ್ದು ವ್ಯಾಪಾರ–ವಹಿವಾಟಿಗೆ ಹೊಡೆತ ಬಿದ್ದಿದೆ.
ಪ್ರಭಾಕರ್ ಹೋಟೆಲ್ ಮಾಲೀಕ
ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆ ಅಗೆದು ಹಾಗಿಯೇ ಬಿಡಲಾಗಿದೆ. ಇದರಿಂದ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು.
ರಾಜು ಪಾನ್ಶಾಪ್ ಅಂಗಡಿ ಮಾಲೀಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.