ಬೆಂಗಳೂರು: ನಗರದ ಮಂತ್ರಿ ಮಾಲ್ ಬಳಿ ವಿದ್ಯಾರ್ಥಿನಿಯ ಕೊಲೆ ಹಾಗೂ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ನಗರದಲ್ಲಿ ನಡೆದಿರುವ ಈ ಎರಡು ಘಟನೆಗಳು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗಳಾಗಿವೆ. ಇಂತಹ ವಿಕೃತ ಘಟನೆಗಳು ಪ್ರಜ್ಞಾವಂತ ಜನತೆಯನ್ನು ದಿಗ್ಭ್ರಮೆಗೊಳಿಸಿವೆ ಎಂದು ಪ್ರತಿಭಟನಕಾರರು ಆತಂಕ ವ್ಯಕ್ತಪಡಿಸಿದರು.
ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಹೇಮಾವತಿ ಮಾತನಾಡಿ, ‘ಮಹಿಳೆಯರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಎಲ್ಲೇ ಆಗಲಿ, ಇಂತಹ ಘಟನೆಗಳಾದಾಗ ಜನರು ಬೃಹತ್ ಮಟ್ಟದಲ್ಲಿ ಒಂದಾಗಿ ಧ್ವನಿ ಎತ್ತಿದಾಗ ಶಿಕ್ಷೆ ಆಗಿರುವುದನ್ನು ನಾವು ಗಮನಿಸಿದ್ದೇವೆ. ಎಲ್ಲಾ ಕಡೆಯೂ ಇಂತಹ ಹೋರಾಟದ ವಾತಾವರಣ ನಿರ್ಮಾಣ ಆಗಬೇಕು. ಆಗ ಮಾತ್ರ ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ’ ಎಂದು ಹೇಳಿದರು.
ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯೆ ತುಳಸಿ ಮಾತನಾಡಿ, ‘ಸರ್ಕಾರಗಳು, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಜನಸಾಮಾನ್ಯರು ಒಗ್ಗೂಡಿ ಧ್ವನಿ ಎತ್ತಬೇಕು’ ಎಂದು ಎಚ್ಚರಿಸಿದರು.
ಎಐಡಿವೈಒ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಜಯಣ್ಣ, ಎ.ಶಾಂತ, ಎಚ್.ಎಲ್.ನಿರ್ಮಲ, ನವಾಜ್, ಕಿರಣ್, ಕೃಷ್ಣ, ವಿನಯ್ ಸಾರಥಿ ಪ್ರತಿಭಟನೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.