ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಯಂತ್ರಣ ತಪ್ಪಿದ ಬೈಕ್ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಟೆಕಿಯೊಬ್ಬರು ಮೃತಪಟ್ಟಿದ್ದಾರೆ.
ಅಟ್ಟೂರು ಲೇಔಟ್ ನಿವಾಸಿ ಆನಂದ್ (35) ಮೃತಪಟ್ಟವರು.
ಚಿಂತಾಮಣಿ ಆನಂದ್ ಅವರು ಮಾನ್ಯತಾ ಟೆಕ್ ಪಾರ್ಕ್ನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
‘ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಯತ್ತ ತೆರಳುತ್ತಿದ್ದರು. ನ್ಯಾಯಾಂಗ ಬಡಾವಣೆಯ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಹೊಡೆದಿದೆ. ಆಗ ಬೈಕ್ ಸಹಿತ ರಸ್ತೆಗೆ ಉರುಳಿ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.
ಸಾರ್ವಜನಿಕರ ಆಕ್ರೋಶ: ‘ಆನಂದ್ ಅವರು ರಸ್ತೆಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ರಕ್ತಸ್ರಾವ ಆಗಿತ್ತು. ಆಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸ ಪಡಬೇಕಾಯಿತು. ರಸ್ತೆಯಲ್ಲಿ ವಿಪರೀತ ದಟ್ಟಣೆ ಇತ್ತು. ವಾಹನಗಳು ಮುಂದಕ್ಕೆ ಸಾಗುತ್ತಿರಲಿಲ್ಲ. ಆಂಬುಲೆನ್ಸ್ ಮುಂದಕ್ಕೆ ಸಾಗಲು ಅವಕಾಶ ಸಿಗಲಿಲ್ಲ. ಸಕಾಲದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೆ ಜೀವ ಉಳಿಯುತ್ತಿತ್ತು’ ಎಂದು ಸ್ಥಳೀಯರು ಹೇಳಿದರು.
ದೇವನಹಳ್ಳಿಯಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ‘ನಮ್ಮ ಮೆಟ್ರೊ’ ಕಾಮಗಾರಿ ನಿಧಾನವಾಗಿ ಸಾಗುತ್ತಿದ್ದು, ಪ್ರತಿನಿತ್ಯ ಈ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಬೇಗನೆ ಕಾಮಗಾರಿ ಪೂರ್ಣಗೊಳಿಸುವಂತೆ ಬಿಎಂಆರ್ಸಿಎಲ್ಗೆ ಸೂಚಿಸಿದ್ದರೂ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.