
ಬೆಂಗಳೂರು: ಮಿಟ್ಟಗಾನಹಳ್ಳಿ–ಕಣ್ಣೂರು– ಬೆಳ್ಳಹಳ್ಳಿ ಭೂ ಭರ್ತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ಗ್ರಾಮಸ್ಥರು ತಡೆ ಹಾಕಿದ್ದಾರೆ.
ಗ್ರಾಮದ ಸಮಸ್ಯೆಗಳನ್ನು ಪರಿಹರಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (ಬಿಎಸ್ಡಬ್ಲ್ಯುಎಂಎಲ್) ನೀಡಿರುವ ಭರವಸೆ ಈಡೇರಿಸಲ್ಲ. ಹೀಗಾಗಿ, ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡಬಾರದು ಎಂದು ಲಾರಿಗಳು ಭೂಭರ್ತಿ ಪ್ರದೇಶಕ್ಕೆ ಹೋಗದಂತೆ ಟ್ರ್ಯಾಕ್ಟರ್ಗಳನ್ನು ಅಡ್ಡ ನಿಲ್ಲಿಸಿದ್ದಾರೆ.
ನಗರದಿಂದ ತ್ಯಾಜ್ಯ ತುಂಬಿಕೊಂಡು ವಿಲೇವಾರಿಗೆ ಹೋಗಿರುವ ಲಾರಿಗಳು ಮಂಗಳವಾರ ಬೆಳಿಗ್ಗೆಯಿಂದ ಸಾಲುಗಟ್ಟಿ ನಿಂತಿವೆ. ಹೀಗಾಗಿ, ನಗರದಲ್ಲಿ ಬುಧವಾರ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿಗೆ ಲಾರಿಗಳು ಲಭ್ಯವಿರುವುದಿಲ್ಲ. ಆದ್ದರಿಂದ ನಗರದ ರಸ್ತೆಗಳಲ್ಲೇ ಕಸ ತುಂಬಿದ ಆಟೊಗಳು ನಿಲ್ಲುವ ಸಾಧ್ಯತೆ ಇದೆ.
‘ತ್ಯಾಜ್ಯ ವಿಲೇವಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ಇವುಗಳೆಲ್ಲವನ್ನೂ ನಿವಾರಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ ಎಂದು ಕಳೆದ ವರ್ಷ ಮಾರ್ಚ್ನಲ್ಲಿ ಭರವಸೆ ನೀಡಿದ್ದರು. 2025ರ ಮಾರ್ಚ್ 11ರಿಂದ ತ್ಯಾಜ್ಯ ವಿಲೇವಾರಿಗೆ ಅವಕಾಶ ನೀಡಿರಲಿಲ್ಲ. ಅಂದಿನ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸ್ಥಳಕ್ಕೆ ಬಂದು ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸುವ ಭರವಸೆ ನೀಡಿದ್ದರು. ಹೀಗಾಗಿ, ಮಾರ್ಚ್ 15ರಿಂದ ತ್ಯಾಜ್ಯ ವಿಲೇವಾರಿ ಆರಂಭವಾಗಿತ್ತು. ಆದರೆ, ನಂತರ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು.
‘ಮಿಟ್ಟಗಾನಹಳ್ಳಿ ಭೂಭರ್ತಿ ಪ್ರದೇಶದಲ್ಲಿರುವ ದ್ರವತ್ಯಾಜ್ಯವನ್ನು ಹೊರಹಾಕಬೇಕು, ಸುತ್ತಮುತ್ತಲಿನ ಕೆರೆಗಳಲ್ಲಿರುವ ದ್ರವತ್ಯಾಜ್ಯದ ಜೊತೆಗೆ ಹೂಳು ತೆಗೆದು ಅಭಿವೃದ್ಧಿ ಮಾಡಿಕೊಡಬೇಕು, ಭೂಭರ್ತಿ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ ಈ ಬಗ್ಗೆ ಯಾವ ರೀತಿಯ ಕಾಮಗಾರಿಗಳನ್ನೂ ಆರಂಭಿಸಿಲ್ಲ’ ಎಂದು ದೂರಿದರು.
‘ಭೂಭರ್ತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಗಿತಕ್ಕೆ ಸಂಬಂಧಿಸಿದಂತೆ, ಮಹದೇವಪುರ ವಿಧಾನಸಭೆ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರೊಂದಿಗೆ ಬಿಎಸ್ಡಬ್ಲ್ಯುಎಂಎಲ್ ಅಧಿಕಾರಿಗಳು ಮಂಗಳವಾರ ಸಂಜೆ ಮಾತುಕತೆ ನಡೆಸಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.