ನಗರದಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹೊಸಕೆರೆಹಳ್ಳಿಯ ಕೆರೆಕೋಡಿ ರಸ್ತೆ ಕುಸಿದು ಬಿದ್ದಿರುವುದು ಕಂಡುಬಂತು
–ಪ್ರಜಾವಾಣಿ ಚಿತ್ರ:ರಂಜು ಪಿ
ಬೆಂಗಳೂರು: ನಗರದಲ್ಲಿ ಮುಂಗಾರು ಪೂರ್ವ ಮಳೆ ಭಾನುವಾರವೂ ಮುಂದುವರಿದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ.
ಎಂ.ಜಿ.ರಸ್ತೆ, ವಿಧಾನಸೌಧ, ಶಾಂತಿನಗರ, ಕೆ.ಆರ್. ಮಾರ್ಕೆಟ್ ಸುತ್ತಮುತ್ತ ರಾತ್ರಿ 7.30 ಸುಮಾರಿಗೆ ಬಿರುಸಿನಿಂದ ಮಳೆ ಆರಂಭವಾಯಿತು. ರಾತ್ರಿ 9ರ ನಂತರವೂ ಕೆಲವೆಡೆ ಸೋನೆ ಮಳೆ ಮುಂದುವರಿದಿತ್ತು. ಕೆ.ಆರ್. ಮಾರ್ಕೆಟ್ ಮೇಲ್ಸೇತುವೆ ಕೆಳಭಾಗ, ಅನಿಲ್ಕುಂಬ್ಳೆ ವೃತ್ತದಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಯಿತು.
ನಗರದ ವಿವಿಧೆಡೆ 20ಕ್ಕೂ ಹೆಚ್ಚು ಮರಗಳು ಹಾಗೂ 50ಕ್ಕೂ ಹೆಚ್ಚು ಕೊಂಬೆಗಳು ಮುರಿದು ಬಿದ್ದಿದ್ದವು. ಕೆಲ ಮರಗಳನ್ನು ತೆರವುಗೊಳಿಸಲಾಗಿದ್ದು, ಉಳಿದವುಗಳ ತೆರವು ಕಾರ್ಯ ಪ್ರಗತಿಯಲ್ಲಿದೆ ಎಂದು ಬಿಬಿಎಂಪಿ ತಿಳಿಸಿದೆ.
ನಗರದಲ್ಲಿ ಸೋಮವಾರದಿಂದ ನಾಲ್ಕು ದಿನ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
19ರಿಂದ 22ರವರೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮುಂದಿನ ನಾಲ್ಕು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಒಂದು ವಾರ ಮಳೆ ಮುಂದುವರಿಯಲಿದ್ದು, 23ರಿಂದ ಗಾಳಿಯ ವೇಗ ಕೊಂಚ ಕಡಿಮೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
ನಗರದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗರಿಷ್ಠ ಉಷ್ಣಾಂಶ ಇಳಿಕೆಯಾಗಿದೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಗರಿಷ್ಠ ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸರಾಸರಿ ಗರಿಷ್ಠ ಉಷ್ಣಾಂಶಕ್ಕಿಂತ 4.8 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.