ಅಪಘಾತ
ಸಾಂದರ್ಭಿಕ ಚಿತ್ರ
ಬೆಂಗಳೂರು: ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ ಮೃತಪಟ್ಟಿದ್ದು, ಅವರ ಮಗನಿಗೆ ಸಣ್ಣ ಗಾಯವಾಗಿದೆ.
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಅಮಲಾ (49) ಅವರು ರಸ್ತೆ ಮೇಲೆ ಬಿದ್ದರು. ಅವರ ಮೇಲೆ ಟಿಪ್ಪರ್ ಹರಿದ ಕಾರಣ ಎರಡೂ ಕಾಲುಗಳು ಜಖಂಗೊಂಡಿದ್ದವು. ಗಾಯಾಳುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಟಿಪ್ಪರ್ ಚಾಲಕನ ವಿರುದ್ಧ ಆಡುಗೋಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
‘ರಸ್ತೆ ಗುಂಡಿಗಳಿಂದಲೇ ಅಪಘಾತ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿದರೆ, ‘ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಆಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
‘ಚರ್ಚ್ಗೆ ಹೋಗಿ ದ್ವಿಚಕ್ರ ವಾಹನದಲ್ಲಿ ಅಮಲಾ ಅವರು ಮಗನ ಜೊತೆ ಹಿಂತಿರುಗುವ ವೇಳೆ ಆಡುಗೋಡಿಯ ಬಾಷ್ ಕಂಪನಿ ಮುಂದೆ ಅಪಘಾತ ಸಂಭವಿಸಿದೆ. ಎದುರಿಗೆ ಆಟೊ ಬಂದ ಕಾರಣ ಅಮಲಾ ಬ್ರೇಕ್ ಹಾಕಿದ್ದಾರೆ. ಆಗ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್, ದ್ವಿಚಕ್ರ ವಾಹನದ ಮೇಲೆ ಹರಿದಿದೆ. ಅಪಘಾತದಲ್ಲಿ ಅವರ ಮಗನಿಗೆ ಸಣ್ಣ ಗಾಯಗಳಾಗಿವೆ. ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ’ ಎಂದು ಮೃತ ಅಮಲಾ ಅವರ ಸಹೋದರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.