ADVERTISEMENT

ಬೆಂಗಳೂರು| ಬೆಟ್ಟಿಂಗ್ ದಂಧೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2023, 4:41 IST
Last Updated 15 ಏಪ್ರಿಲ್ 2023, 4:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಟಿ–20 ಕ್ರಿಕೆಟ್ ಪಂದ್ಯಗಳ ಮಾಹಿತಿಯನ್ನು ಆ್ಯಪ್‌ ಮೂಲಕ ರವಾನಿಸಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಜಾಲವನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಭೇದಿಸಿದ್ದಾರೆ.

‘ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಯುವ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತುಕೊಳ್ಳುತ್ತಿದ್ದ ಆರೋಪಿಗಳು, ಪ್ರತಿ ಬಾಲ್‌ ಮಾಹಿತಿಯನ್ನು ಆ್ಯಪ್‌ನಲ್ಲಿ ನಮೂದಿಸುತ್ತಿದ್ದರು. ಜಾಲದ ಮತ್ತಷ್ಟು ಸದಸ್ಯರು, ಅದೇ ಮಾಹಿತಿ ಬಳಸಿಕೊಂಡು ಜನರಿಂದ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಪಂದ್ಯ ನಡೆಯುವ ವೇಳೆ ಅಕ್ರಮ ತಡೆಯಲು ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಮೊಬೈಲ್‌ನಲ್ಲಿ ಹೆಚ್ಚು ಸಮಯ ಕಳೆಯುವ ಪ್ರೇಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ನಡೆದ ಪಂದ್ಯದ ವೇಳೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಬೆಟ್ಟಿಂಗ್ ವಿಷಯ ಗೊತ್ತಾಗಿದೆ’ ಎಂದು ತಿಳಿಸಿದರು.

ADVERTISEMENT

‘ವಿಶಾಂತ್, ಅಮರ್ ಜಿತ್ ಸಿಂಗ್, ಮೋಹಿತ್ ಬಾತ್ರಾ ಹಾಗೂ ದುಶ್ಯಂತ್ ಕುಮಾರ್ ಸೋನಿ ಎಂಬುವವರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಮತ್ತಷ್ಟು ಮಂದಿ ಶಾಮೀಲಾಗಿರುವ ಮಾಹಿತಿ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದರು.

ಸಮಯ ವ್ಯತ್ಯಾಸದಿಂದ ಲಾಭ: ‘ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್ಕೂ ಟಿ.ವಿ.ಯಲ್ಲಿ ಪ್ರಸಾರ ವಾಗುವ ಪಂದ್ಯಕ್ಕೂ ಸಮಯದ ವ್ಯತ್ಯಾಸವಿರುತ್ತದೆ. ಇದನ್ನು ತಿಳಿದಿದ್ದ ಆರೋಪಿಗಳು, ಟಿಕೆಟ್ ಕಾಯ್ದಿರಿಸಿ ಕ್ರೀಡಾಂಗಣಕ್ಕೆ ಹೋಗುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಪಂದ್ಯದ ಪ್ರತಿ ಬಾಲ್ ಹಾಗೂ ಬ್ಯಾಟಿಂಗ್ ಮಾಹಿತಿಯನ್ನು ಆ್ಯಪ್‌ ಮೂಲಕ ರವಾನಿಸುತ್ತಿದ್ದರು. ಹೀಗೆ ಜನರಿಂದ ಬೆಟ್ಟಿಂಗ್ ಕಟ್ಟಿಸಿಕೊಂಡು ವಂಚಿಸುತ್ತಿದ್ದರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.