ADVERTISEMENT

ಎಲ್ಐಸಿ ಮೂಲಕ ‘ಭಾಗ್ಯ ಲಕ್ಷ್ಮಿ’ ಜಾರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 21:25 IST
Last Updated 22 ಡಿಸೆಂಬರ್ 2020, 21:25 IST
   

ಬೆಂಗಳೂರು: ‘ಭಾಗ್ಯ ಲಕ್ಷ್ಮಿ’ ಯೋಜನೆಯಡಿ ನೀಡಬಹುದಾದ ಕೊಡುಗೆಯ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸುವಂತೆ ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

'ಭಾಗ್ಯ ಲಕ್ಷ್ಮಿ' ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರೀಮಿಯಂ ಮೊತ್ತಕ್ಕೆ 18 ವರ್ಷದ ವೇಳೆಗೆ ₹ 1 ಲಕ್ಷ ನೀಡಲು ಎಲ್ಐಸಿ ಅಸಹಾಯಕತೆ ವ್ಯಕ್ತಪಡಿಸಿತ್ತು. ಹೀಗಾಗಿ, ಈ ಯೋಜನೆಯನ್ನು ಭಾರತೀಯ ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಮೂಲಕ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿತ್ತು.

ಮುಖ್ಯಮಂತ್ರಿ ಅವರನ್ನು ಮಂಗಳವಾರ ಭೇಟಿ ಮಾಡಿದ ಎಲ್ಐಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ನೇತೃತ್ವದ ಅಧಿಕಾರಿಗಳ ನಿಯೋಗ, ‘ಭಾಗ್ಯ ಲಕ್ಷ್ಮಿ’ ಯೋಜನೆಯನ್ನು ಎಲ್ಐಸಿ ಮೂಲಕವೇ ಜಾರಿಗೊಳಿಸುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿತು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ಬಗ್ಗೆ ಪರಿಶೀಲಿಸಲಾಗುವುದು' ಎಂದರು.

ADVERTISEMENT

ಎಲ್ಐಸಿ ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಾಗಲಾಂಬಿಕಾ ದೇವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.