ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಅವಾಚ್ಯ ಪದಗಳಿಂದ ನಿಂದಿಸಿದ್ದನ್ನು ಪ್ರಶ್ನಿಸಿದ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತ ಸಾವಿಗೀಡಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರದ ಬೇಗುಸರಾಯ್ ಕಾರ್ಮಿಕ ಭೀಮ್ ಕುಮಾರ್ (25) ಮೃತರು. ಮೃತನ ಸ್ನೇಹಿತರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಸಲ್ಮಾನ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
‘ಅರೆಕೆರೆ ಬಳಿ ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಬಂದಿದ್ದ ಭೀಮ್ ಕುಮಾರ್ ಸ್ನೇಹಿತರೊಂದಿಗೆ ಮೈಕೋ ಲೇಔಟ್ ವ್ಯಾಪ್ತಿಯಲ್ಲಿ ವಾಸವಿದ್ದ. ಸೆಪ್ಟೆಂಬರ್ 7ರಂದು ಭೀಮ್ ಕುಮಾರ್ ಮತ್ತು ಸ್ನೇಹಿತರು ಅರೆಕೆರೆ ಬಳಿ ಪಾನಿಪುರಿ ತಿನ್ನುತ್ತಾ ನಿಂತಿದ್ದ ವೇಳೆ ಅಲ್ಲಿಯೇ ಇದ್ದ ಸಲ್ಮಾನ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿತ್ತು. ಇದಾದ ನಂತರ ಸ್ನೇಹಿತ ಧೀರಜ್ನೊಂದಿಗೆ ಭೀಮ್ ಕುಮಾರ್ ಮನೆಯತ್ತ ಹೊರಟಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ಆರೋಪಿ, ಇಬ್ಬರ ಮುಖಕ್ಕೂ ಕೈನಿಂದ ಪಂಚ್ ಮಾಡಿ ಪರಾರಿಯಾಗಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ರಸ್ತೆ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಭೀಮ್ ಕುಮಾರ್ನನ್ನು ಸ್ನೇಹಿತ ಧೀರಜ್ ಮನೆಗೆ ಕರೆತಂದು ಮಲಗಿಸಿದ್ದ. ಮೂರು ದಿನಗಳ ಕಾಲ ಅರೆಪ್ರಜ್ಞಾವಸ್ಥೆಯಲ್ಲಿದ್ದ. ಸೆಪ್ಟೆಂಬರ್ 10ರಂದು ಸ್ನೇಹಿತರು ಎಬ್ಬಿಸಲು ಯತ್ನಿಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ನಂತರ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪುಟ್ಟೇನಹಳ್ಳಿ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದ್ದು, ಆರೋಪಿ ಪತ್ತೆಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.