ಅಪಘಾತ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಭಾಷ್ಯಂ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದಾರೆ.
ರಾಜನ್ (94) ಗಾಯಗೊಂಡವರು.
‘ರಾಜನ್ ಅವರು ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ರಸ್ತೆ ದಾಟುತ್ತಿದ್ದರು. ವೇಗವಾಗಿ ಬಂದ ದ್ವಿಚಕ್ರ ವಾಹನ, ಅವರಿಗೆ ಡಿಕ್ಕಿ ಹೊಡೆಯಿತು. ಸವಾರ ಬೈಕ್ ನಿಲ್ಲಿಸದೇ ಪರಾರಿ ಆಗಿದ್ದಾನೆ. ಈ ದೃಶ್ಯ ಜಂಕ್ಷನ್ನಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಪೊಲೀಸರು ಹೇಳಿದರು.
‘ಅದೇ ಮಾರ್ಗದಲ್ಲಿ ಬೈಕ್ನಲ್ಲಿ ಬರುತ್ತಿದ್ದ ಸಂಚಾರ ವಿಭಾಗದ ಕಾನ್ಸ್ಟೆಬಲ್ ಮಲ್ಲಿಕಾರ್ಜುನ್ ಎಂಬುವವರು ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಟೊದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಟ್ಟಣೆಯಿಂದ ಆಂಬುಲೆನ್ಸ್ ಬರುವುದು ತಡವಾಗಲಿದೆ ಎಂದು ಆಟೊದಲ್ಲಿ ಕರೆದೊಯ್ದು ಮಾನವೀಯತೆ ತೋರಿದರು’ ಎಂದು ಸ್ಥಳೀಯರು ತಿಳಿಸಿದರು.
‘ರಾಜನ್ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸವಾರನ ಪತ್ತೆಗೆ ಶೋಧ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.