ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ ಆರೋಪದಡಿ ಎನ್.ಲಕ್ಷ್ಮಿಪತಿ (24) ಎಂಬುವರನ್ನು ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಆಂಧ್ರಪ್ರದೇಶ ಕುಪ್ಪಂನ ಲಕ್ಷ್ಮಿಪತಿ, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದ. ಈತನನ್ನು ಬಂಧಿಸಿ, ₹ 4 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಬೆಂಗಳೂರಿಗೆ ಆಗಾಗ ಬರುತ್ತಿದ್ದ ಆರೋಪಿ, ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಲಾಕ್ ಮುರಿದು ಕದಿಯುತ್ತಿದ್ದ. ಅವುಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗುತ್ತಿದ್ದ. ಕಾರ್ಮಿಕನ ಸೋಗಿನಲ್ಲಿ ಹಣದ ಅವಶ್ಯಕತೆ ಇರುವುದಾಗಿ ಹೇಳಿ ಮಾರಾಟ ಮಾಡುತ್ತಿದ್ದ.’
‘ತಮಿಳುನಾಡಿನಲ್ಲೂ ದ್ವಿಚಕ್ರ ವಾಹನ ಕದಿಯುತ್ತಿದ್ದ ಆರೋಪಿ, ಅವುಗಳನ್ನು ಕರ್ನಾಟಕಕ್ಕೆ ತಂದು ನೋಂದಣಿ ಫಲಕ ಬದಲಾಯಿಸಿ ಮಾರುತ್ತಿದ್ದ. ನಂತರ, ಆಂಧ್ರಪ್ರದೇಶಕ್ಕೆ ಹೋಗಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.