
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿರುವ ಬಯೊಕಾನ್ ಕಂಪನಿಯ ಐದನೇ ಮಹಡಿಯಿಂದ ಜಿಗಿದು ಉದ್ಯೋಗಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬನಶಂಕರಿಯ ಅನಂತಕುಮಾರ್ (26) ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅನಂತ್ ಕುಮಾರ್ ಅವರ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಬನಶಂಕರಿಯ ಅನಂತ್ ಕುಮಾರ್ ಅವರು ಕಳೆದ ಎರಡು ತಿಂಗಳಿನಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಐದನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ಕಂಪನಿಯ ಉದ್ಯೋಗಿಯೊಬ್ಬರು ಬೆಂಗಳೂರಿನಲ್ಲಿ ನಿಧನರಾಗಿರುವುದು ನಮಗೆ ತೀವ್ರ ದುಃಖವನ್ನುಂಟುಮಾಡಿದೆ. ಈ ಅತ್ಯಂತ ಕಠಿಣ ಸಮಯದಲ್ಲಿ ಅವರ ಕುಟುಂಬದವರಿಗೆ ದೇವರು ದು:ಖ ಭರಿಸುವ ಶಕ್ತಿ ನೀಡಲಿ. ಈ ಘಟನೆ ಬಗ್ಗೆ ಅಧಿಕಾರಿಗಳ ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಮಗೆ ಸಾಧ್ಯವಾಗುವುದಿಲ್ಲ ಎಂದು ಬಯೊಕಾನ್ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.