FIR
– ಕಡತ ಚಿತ್ರ
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದ್ದು, ಬಿಜೆಪಿಯ ಐ.ಟಿ ಹಾಗೂ ಸಾಮಾಜಿಕ ಮಾಧ್ಯಮಗಳ ನಿರ್ವಹಣೆ ವಿಭಾಗದ ಮುಖ್ಯಸ್ಥರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಮುಖ್ಯಸ್ಥ ಸಿ.ಎಂ.ಧನಂಜಯ್ ಅವರು ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
‘ಪಹಲ್ಗಾಮ್ನಲ್ಲಿ ನಡೆದ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ಕರ್ನಾಟಕ ಐ.ಟಿ ಹಾಗೂ ಸೋಷಿಯಲ್ ಮೀಡಿಯಾ ಎಂಬ ‘ಎಕ್ಸ್’ ಖಾತೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋದಾಗ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದಿದೆ. ರಾಹುಲ್ ಅವರು ಪ್ರತಿ ಬಾರಿ ವಿದೇಶಕ್ಕೆ ಹೋದಾಗಲೂ ಈ ರೀತಿಯ ಕೃತ್ಯಗಳು ನಡೆದಿವೆ ಎಂದು ಪೋಸ್ಟ್ ಹಾಕಲಾಗಿದೆ. ಇದರಿಂದ ಸಮಾಜದಲ್ಲಿ ಶಾಂತಿ–ಸೌಹಾರ್ದ ಹಾಳಾಗಲಿದೆ. ಗುಂಪು ಘರ್ಷಣೆ ಉಂಟು ಮಾಡುವ ಉದ್ದೇಶದಿಂದ ಹಾಗೂ ರಾಹುಲ್ ಗಾಂಧಿ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಗೌರವಕ್ಕೆ ಧಕ್ಕೆ ತರಲಾಗಿದೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಬಿಜೆಪಿ ಕರ್ನಾಟಕ ಐ.ಟಿ ಹಾಗೂ ಸೋಷಿಯಲ್ ಮೀಡಿಯಾ ಎಂಬ ‘ಎಕ್ಸ್’ ಖಾತೆಯ ಮುಖ್ಯಸ್ಥರ ಹಾಗೂ ಇತರರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಧನಂಜಯ್ ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.