ADVERTISEMENT

ಬೆಂಗಳೂರು| ಸುಳ್ಳು ಹೇಳಿದ ಬಿಜೆಪಿ: ಆರೋಪ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 5:00 IST
Last Updated 25 ಮಾರ್ಚ್ 2023, 5:00 IST
ಡಾ.ಶಂಕರ್ ಗುಹಾ ದ್ವಾರಕನಾಥ್ ಮತ್ತು ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್ ಧರಣಿ ನಡೆಸಿದರು
ಡಾ.ಶಂಕರ್ ಗುಹಾ ದ್ವಾರಕನಾಥ್ ಮತ್ತು ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್ ಧರಣಿ ನಡೆಸಿದರು   

ಬೆಂಗಳೂರು: ಶ್ರೀ ಗುರುರಾಘವೇಂದ್ರ ಬ್ಯಾಂಕ್ ಮತ್ತು ವಸಿಷ್ಠ ಸೌಹಾರ್ದ ಸೊಸೈಟಿಯ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಠೇವಣಿದಾರರ ಹಿತ ರಕ್ಷಣಾ ವೇದಿಕೆಯ ಮುಖ್ಯಸ್ಥ ಡಾ.ಶಂಕರ್ ಗುಹಾ ದ್ವಾರಕನಾಥ್ ಮತ್ತು ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್ ಧರಣಿ ನಡೆಸಿದರು.

ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಧರಣಿ ನಡೆಸಿದ ಕಾಂಗ್ರೆಸ್‌ ನಾಯಕರು, ‘ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಿದ್ದೇವೆ ಎಂದು ಸಹಕಾರಿ ಸಚಿವರೇ ಸದನದಲ್ಲಿ ಹೇಳಿದ್ದರು. ಆದರೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಯಾವುದೇ ತೀರ್ಮಾನ ತೆಗೆದುಕೊಳ್ಳಲೇ ಇಲ್ಲ’ ಎಂದು
ದೂರಿದರು.

‘ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದ್ದು, ಇದೇ ಕೊನೆಯ ಸಂಪುಟ ಸಭೆಯಾಗಲಿದೆ. ಆದರೂ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸದೆ ಆಡಳಿತ ಸರ್ಕಾರ ಸುಳ್ಳು ಹೇಳಿ ಜಾರಿಕೊಂಡಿದೆ. ಬಿಜೆಪಿಯವರು ಜನರನ್ನು ದಿಕ್ಕು ತಪ್ಪಿಸುವ ತಂತ್ರಗಾರಿಕೆಯನ್ನು ಮಾಡಿದ್ದಾರೆ. ಈ ಸಹಕಾರಿ ಬ್ಯಾಂಕ್ ಹಗರಣದಲ್ಲಿ ತಪ್ಪಿತಸ್ಥರನ್ನು ಕಾಪಾಡುವ ಕೆಲಸ ಮಾಡಿದ್ದಾರೆ’ ಎಂದು ಡಾ.ಶಂಕರ್ ಆರೋಪಿಸಿದರು.

ADVERTISEMENT

ಯು.ಬಿ. ವೆಂಕಟೇಶ್‌ ಮಾತನಾಡಿ, ‘ನಾನು ಸದನದಲ್ಲಿ ಅದೆಷ್ಟೋ ಬಾರಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಆದರೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನೀಡಿದ್ದ ಭರವಸೆ ಕೊನೆಗೆ ಈಡೇರಲಿಲ್ಲ. ಬಿಜೆಪಿಯವರು ಸುಳ್ಳು ಹೇಳಿ ದಿನಗಳನ್ನು ದೂಡಿ ಜನರನ್ನು ದಿಕ್ಕು ತಪ್ಪಿಸುವಲ್ಲಿ ನಿಸ್ಸೀಮರು ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ’
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.