ADVERTISEMENT

ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಸೋಮಶೇಖರ್ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 5:02 IST
Last Updated 7 ಡಿಸೆಂಬರ್ 2020, 5:02 IST
ಅರುಣ್‌ ಸಿಂಗ್ ಅವರನ್ನು ಅಭಿನಂದಿಸಿದ ಸಚಿವ ಎಸ್.ಟಿ. ಸೋಮಶೇಖರ್
ಅರುಣ್‌ ಸಿಂಗ್ ಅವರನ್ನು ಅಭಿನಂದಿಸಿದ ಸಚಿವ ಎಸ್.ಟಿ. ಸೋಮಶೇಖರ್   

ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ ಸಿಗಲಿದೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭಾನುವಾರ ಭೇಟಿ ಮಾಡಿ ಮಾತನಾಡಿದ ಅವರು, ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು.

‘ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದೆ. ಈ ವಿಭಾಗದ ಐದು ಜಿಲ್ಲೆಗಳಲ್ಲಿ 9 ಸಮಾವೇಶ ನಡೆಸಿದ್ದು, 40 ಮಂಡಲಗಳು ಭಾಗಿಯಾಗಿವೆ. ಈ ಕಾರ್ಯಕ್ರಮಗಳಲ್ಲಿ 3,946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು’ ಎಂದು ಮಾಹಿತಿ ನೀಡಿದರು.

ADVERTISEMENT

‘ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ರೈತರಿಗೆ ನನ್ನ ಬೆಳೆ ನನ್ನ ಹಕ್ಕು ಎಂಬ ಅಂಶವನ್ನು ಮನದಟ್ಟು ಮಾಡಿಕೊಡಲಾಗಿದೆ' ಎಂದು ತಿಳಿಸಿದರು.

‘ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಕರ್ನಾಟಕದ ಪಾಲಿನ ₹4,750 ಕೋಟಿಯಲ್ಲಿ ಮೊದಲನೇ ಕಂತಿನ ರೂಪದಲ್ಲಿ ಸುಮಾರು ₹635 ಕೋಟಿ ಆರ್ಥಿಕ ನೆರವನ್ನು ಕರ್ನಾಟಕಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದೂ ಮಾಹಿತಿ ನೀಡಿದರು.

ಲಾಭದಲ್ಲಿರುವ ಸಹಕಾರ ಸಂಸ್ಥೆಗಳಿಂದ ಹಾಗೂ ಎಪಿಎಂಸಿಗಳಿಂದ ದೇಣಿಗೆ ಸಂಗ್ರಹಿಸಿ, ಕೋವಿಡ್‌ ಪರಿಹಾರ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹53 ಕೋಟಿ ನೀಡಿದ್ದೇವೆ. ಕೊರೊನಾ ಸೇನಾನಿಗಳಾದ 42,540 ಆಶಾ ಕಾರ್ಯಕರ್ತೆಯರಿಗೆ ತಲಾ ₹3,000 ದಂತೆ ಒಟ್ಟು ₹12.75 ಕೋಟಿ ವಿತರಿಸಿದ್ದೇವೆ’ ಎಂದೂ ಸಚಿವರು ಅರುಣ್‌ ಸಿಂಗ್ ಅವರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.