ಬೆಂಗಳೂರು: ವಿಧಾನಪರಿಷತ್ನ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಇದೇ 16 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಅವರನ್ನು ಗೆಲ್ಲಿಸಿಕೊಳ್ಳಲು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಅನಿಲ್ಕುಮಾರ್ ಎಂಬುವರು ತಮಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಬೆಂಬಲ ಇದೆ ಎಂದು ಹೇಳಿಕೊಂಡು ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಚುನಾವಣೆ ಅನಿವಾರ್ಯವಾಗಿದೆ. ಅನಿಲ್ ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಬಹಿರಂಗವಾಗಿ ಬೆಂಬಲವನ್ನು ಸೂಚಿಸಿಲ್ಲ. ಜೆಡಿಎಸ್ನ ಕೆಲವು ಶಾಸಕರು ಮಾತ್ರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ.
ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಹಿನ್ನಡೆ ಆಗಬಾರದು ಎಂಬ ಕಾರಣಕ್ಕೆ ಬಿಜೆಪಿ ಕೊನೆ ಕ್ಷಣದ ಕಾರ್ಯತಂತ್ರವನ್ನು ರಚಿಸಲಿದೆ. ಸವದಿಯನ್ನು ಗೆಲ್ಲಿಸಿಕೊಳ್ಳುವುದು ಬಿಜೆಪಿಗೆ ಸವಾಲಾಗಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲ ಶಾಸಕರೂ ಹಾಜರಿದ್ದು, ಪಕ್ಷದ ಅಭ್ಯರ್ಥಿ ಪರವಾಗಿಯೇ ಮತ ಚಲಾಯಿಸಲು ಸೂಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.