ADVERTISEMENT

ಕಪ್ಪು ಶಿಲೀಂಧ್ರ: ಕರ್ನಾಟಕದಲ್ಲಿ ವಾರದಲ್ಲಿ 17 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 20:48 IST
Last Updated 11 ಜುಲೈ 2021, 20:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ತೀವ್ರತೆಗೆ ಒಂದು ವಾರದಲ್ಲಿ 17 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 104ಕ್ಕೆ ಏರಿಕೆ ಕಂಡಿದೆ.

ಹೊಸದಾಗಿ ಬೌರಿಂಗ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಲಾ ಎರಡು ಶಿಲೀಂಧ್ರ ಸೋಂಕು ಪ್ರಕರಣಗಳು ವರದಿಯಾಗಿವೆ. ಏಳು ದಿನಗಳಲ್ಲಿ 52 ಮಂದಿಗೆ ಸೋಂಕು ತಗುಲಿದೆ. ಈವರೆಗೆ ಈ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,120ಕ್ಕೆ ಏರಿಕೆಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈವರೆಗೆ 208 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ, ಬೌರಿಂಗ್ ಆಸ್ಪತ್ರೆಯಲ್ಲಿ 353, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಾಲ್ಕು ಹಾಗೂ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ. ಕಪ್ಪು ಶಿಲೀಂಧ್ರ ಸೋಂಕಿತರಲ್ಲಿ ಈವರೆಗೆ 556 ಮಂದಿ ಸರ್ಕಾರಿ ವ್ಯವಸ್ಥೆಯಡಿ ದಾಖಲಾಗಿದ್ದಾರೆ. ಇನ್ನುಳಿದವರು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ADVERTISEMENT

ರಾಜ್ಯದಲ್ಲಿ ಈವರೆಗೆ 3,511 ಕಪ್ಪು ಶಿಲೀಂಧ್ರ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 303 ಮಂದಿ ಮೃತಪಟ್ಟಿದ್ದಾರೆ.

‘ಕೆಲ ದಿನಗಳಿಂದ ಶಿಲೀಂಧ್ರ ಸೋಂಕು ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಪ್ರತಿನಿತ್ಯ ಎರಡರಿಂದ ಮೂರು ಪ್ರಕರಣಗಳು ವರದಿಯಾಗುತ್ತಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಕಾರಣ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆಯಿಲ್ಲ. ಕೆಲವರು ತಡವಾಗಿ ದಾಖಲಾಗುವ ಕಾರಣ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ’ ಎಂದು ಬೆಂಗಳೂರು ನಗರ ಜಿಲ್ಲಾ ಶಸ್ತ್ರಚಿಕಿತ್ಸಕ ಅನ್ಸರ್ ಅಹಮದ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.