ADVERTISEMENT

‘ಬ್ಲ್ಯಾಕ್‌ಮೇಲ್‌’ ಮಾಡಿ ವಂಚಿಸುತ್ತಿದ್ದ ಮಾಜಿ ಕಾನ್‌ಸ್ಟೆಬಲ್‌ ಸೆರೆ

ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ವಂಚಿಸುತ್ತಿದ್ದ ಆರೋಪಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2025, 15:18 IST
Last Updated 23 ಫೆಬ್ರುವರಿ 2025, 15:18 IST
ಮುರುಗಪ್ಪ
ಮುರುಗಪ್ಪ   

ಬೆಂಗಳೂರು: ಲೋಕಾಯುಕ್ತದ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ‘ಬ್ಲ್ಯಾಕ್‌ಮೇಲ್’ ಮಾಡಿ, ಹಣ ಪಡೆದು ವಂಚಿಸುತ್ತಿದ್ದ ಆರೋಪಿ, ಮಾಜಿ ಕಾನ್‌ಸ್ಟೆಬಲ್‌ ಮುರುಗಪ್ಪ ನಿಂಗಪ್ಪ ಕುಂಬಾರ್‌ (56) ಎಂಬಾತನನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಬಸವರಾಜು ಆರ್. ಮಗದಮ್‌ ಅವರು ನೀಡಿರುವ ದೂರಿನ ಮೇರೆಗೆ ಫೆಬ್ರುವರಿ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಿದ್ದರು.

‘ಬೆಳಗಾವಿ ಜಿಲ್ಲೆ, ಚಿಕ್ಕೋಡಿ ತಾಲ್ಲೂಕಿನ ಸದಲಗ ಗ್ರಾಮದ ಆರೋಪಿ ಮುರುಗಪ್ಪ, ರಾಜ್ಯ ಮೀಸಲು ಪೊಲೀಸ್‌ ಪಡೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲವು ವರ್ಷಗಳ ಹಿಂದೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ’ ಎಂದು ಮೂಲಗಳು ತಿಳಿಸಿವೆ.

ADVERTISEMENT

‘ಕೆಲವು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದ ಆರೋಪಿ, ತಾನು ಲೋಕಾಯುಕ್ತ ಕಚೇರಿಯ ಅಧಿಕಾರಿ ಎಂಬುದಾಗಿ ಪರಿಚಯ ಮಾಡಿಕೊಳ್ಳುತ್ತಿದ್ದ. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗುತ್ತಿದೆ ಬೆದರಿಕೆ ಹಾಕುತ್ತಿದ್ದ. ಪ್ರಕರಣ ದಾಖಲಾಗುವುದನ್ನು ತಪ್ಪಿಸಲು ಹಣ ನೀಡಬೇಕು ಎಂಬುದಾಗಿ ಬೇಡಿಕೆ ಇಡುತ್ತಿದ್ದ’ ಎಂದು ಮೂಲಗಳು ಹೇಳಿವೆ.

‘ಪ್ರಕರಣ ದಾಖಲಾದ ಮೇಲೆ ಆರೋಪಿಯ ಮೊಬೈಲ್‌ ಸಂಖ್ಯೆಯನ್ನು ಟ್ರೂಕಾಲರ್‌ನಲ್ಲಿ ಪರಿಶೀಲನೆ ನಡೆಸಲಾಗಿತ್ತು. ಲೋಕಾಯುಕ್ತ ಡಿವೈಎಸ್‌ಪಿ ಎಂದು ನಮೂದು ಮಾಡಿಕೊಂಡಿರುವುದು ಪತ್ತೆಯಾಗಿತ್ತು. ಮೊಬೈಲ್‌ ಲೊಕೇಶನ್‌ ಪರಿಶೀಲಿಸಿದಾಗ ಮಹಾರಾಷ್ಟ್ರದ ಶಿರೋಳ್‌ ಪ್ರದೇಶವನ್ನು ತೋರಿಸುತ್ತಿತ್ತು. ಅಲ್ಲಿಗೆ ಪೊಲೀಸ್‌ ತಂಡವನ್ನು ಕಳುಹಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಯ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ. ಬ್ಲ್ಯಾಕ್​ಮೇಲ್ ನಡೆಸಿದ್ದ ಆರೋಪದ ಅಡಿ ಮುರುಗಪ್ಪ ಕಳೆದ ವರ್ಷ ಬಂಧನಕ್ಕೆ ಒಳಗಾಗಿದ್ದ. ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ವಂಚನೆಗೆ ಮುಂದಾಗಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.