ಬೆಂಗಳೂರು: ಯಲಹಂಕದ ಅನಿಲ ಆಧಾರಿತ ವಿದ್ಯುತ್ ಸ್ಥಾವರದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಕೃಷ್ಣ ಭಟ್ ಹಾಗೂ ಮಂಜಪ್ಪ ಮೃತರು.
ಅನಿಲ ಆಧಾರಿತ ವಿದ್ಯುತ್ ತಯಾರಿಸುವ ಉದ್ದೇಶದಿಂದ ಕೆಪಿಸಿಎಲ್ ನೇತೃತ್ವದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಗುತ್ತಿಗೆ ಪಡೆದಿದ್ದ ಬಿಎಚ್ಇಎಲ್, ಸ್ಥಾವರ ನಿರ್ಮಾಣ ಮಾಡುತ್ತಿದೆ. ಆ ಪೈಕಿ 370 ಮೆಗಾ ವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ 1ನೇ ಘಟಕವನ್ನು ಕಾರ್ಯಾಚರಣೆಗೆ ಅಣಿಗೊಳಿಸುವುದಕ್ಕಾಗಿ ಪ್ರಯೋಗ ಮಾಡುವಾಗ ಅಕ್ಟೋಬರ್ 2ರಂದು ನಸುಕಿನಲ್ಲಿ ಸ್ಫೋಟ ಸಂಭವಿಸಿತ್ತು.
ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೃಷ್ಣ ಭಟ್ ಹಾಗೂ ಮಂಜಪ್ಪ ಸೇರಿ 15 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
‘ಕೃಷ್ಣ ಭಟ್ ಹಾಗೂ ಮಂಜಪ್ಪ ಅವರು ಮೃತಪಟ್ಟ ಬಗ್ಗೆ ಆಸ್ಪತ್ರೆಯಿಂದ ವರದಿ ಬಂದಿದೆ. ಮರಣೋತ್ತರ ಪರೀಕ್ಷೆಗೆ ಕ್ರಮ ಕೈಗೊಳ್ಳಲಾಗಿದೆ. ಅವರಿಬ್ಬರು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಕಂಪನಿ ನೌಕರರು ಎಂದು ಗೊತ್ತಾಗಿದೆ. ಪ್ರಕರಣದ ವಿಚಾರಣೆ ಮುಂದುವರಿಸಿದೆ’ ಎಂದು ಯಲಹಂಕ ಉಪನಗರ ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.