ADVERTISEMENT

ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 19:55 IST
Last Updated 30 ಏಪ್ರಿಲ್ 2022, 19:55 IST

ಬೆಂಗಳೂರು: ಹೆಸರಘಟ್ಟ ಬಳಿಯ ತೋಟದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ನಿವಾಸಿ ಮಂಜುನಾಥ್, ಕೊಡಿಗೇಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂರು ತಿಂಗಳಿನಿಂದ ರಜೆ ಮೇಲಿದ್ದ ಅವರು ಸಂಬಂಧಿಕರ ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪತ್ನಿ ಹಾಗೂ ಮಕ್ಕಳ ಜೊತೆ ಮಂಜುನಾಥ್ ವಾಸವಿದ್ದರು. ಕೆಲಸಕ್ಕೆ ಹೋಗದೇ ಸದಾ ಮನೆಯಲ್ಲಿರುತ್ತಿದ್ದ ಅವರು, ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ದೈಹಿಕವಾಗಿ ಕುಗ್ಗಿದ್ದ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಗೊತ್ತಾಗಿದೆ’ ಎಂದೂ ತಿಳಿಸಿದರು.

ADVERTISEMENT

‘ಪತ್ನಿ ಹಾಗೂ ಮಕ್ಕಳು ತುಮಕೂರಿನಲ್ಲಿರುವ ಸಂಬಂಧಿಕರ ಮನೆಗೆ ಇತ್ತೀಚೆಗೆ ಹೋಗಿದ್ದರು. ಗುರುವಾರ ರಾತ್ರಿ ತೋಟಕ್ಕೆ ಹೋಗಿದ್ದ ಮಂಜುನಾಥ್, ಅಲ್ಲಿಯೇ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶುಕ್ರವಾರ ಬೆಳಿಗ್ಗೆ ಮೃತದೇಹ ನೋಡಿದ್ದ ಸ್ಥಳೀಯರು, ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.