ಬೆಂಗಳೂರು: ಬೆಂಗಳೂರು ನಗರ ದೇಶದಲ್ಲೇ ಅತಿ ಹೆಚ್ಚು ಆದಾಯ ತೆರಿಗೆಯನ್ನು ನೀಡುವ ನಗರ. 2021–22 ರಲ್ಲಿ ₹1.69 ಲಕ್ಷ ಕೋಟಿ ಆದಾಯ ತೆರಿಗೆ ಪಾವತಿ, ಇಲ್ಲಿನ ರಸ್ತೆಗಳು ಕೆಟ್ಟದಾಗಿವೆ, ವಾಹನ ದಟ್ಟಣೆ ಹೀರುತ್ತದೆ, ಜೀವನ ಗುಣಮಟ್ಟ ಕುಸಿದು ಹೋಗಿದ್ದು, ದೆಹಲಿ ನಮ್ಮನ್ನು ಕಡೆಗಣಿಸಿದೆ ಎಂದು ಉದ್ಯಮಿ ಟಿ.ವಿ.ಮೋಹನ್ದಾಸ್ ಪೈ ಟ್ವೀಟ್ ಮಾಡಿದ್ದಾರೆ.
ಪ್ರಧಾನಿಯವರೇ ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಯವರ ನೆರವಿಗೆ ಧಾವಿಸಿ ಎಂದು ಹೇಳಿದ್ದಾರೆ. ತಮ್ಮ ಟ್ವೀಟ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಆದಾಯ ತೆರಿಗೆ ಪಾವತಿಯಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ (₹1.66 ಲಕ್ಷ ಕೋಟಿ). ಬೆಂಗಳೂರನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ನಗರದಲ್ಲಿ ರಸ್ತೆಗಳ ಸ್ಥಿತಿ ಸುಧಾರಿಸಿದೆ. ಮಳೆಯಿಂದಾಗಿ ರಸ್ತೆಗಳ ಕಾಮಗಾರಿ ನಿಧಾನವಾಗಿತ್ತು. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೆಲಸ ಮಾಡಲಿದ್ದೇವೆ. ಮೋಹನ್ದಾಸ್ ಪೈ ಅವರ ಜತೆ ಮಾತನಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ಖಾತಾ ಬಿಕ್ ಕಂಪನಿ ಸ್ಥಾಪಕ ಹಾಗೂ ಸಿಇಒ ರವೀಶ್ ನರೇಶ್ ಬೆಂಗಳೂರು ರಸ್ತೆಗಳ ದುಸ್ಥಿತಿಯ ಬಗ್ಗೆ ಟ್ವೀಟ್ ಮಾಡಿದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.