ADVERTISEMENT

ಬೆಂಗಳೂರು| ದ್ವಿಚಕ್ರ ವಾಹನಕ್ಕೆ ಬೊಲೆರೋ ಡಿಕ್ಕಿ: ವಿದ್ಯಾರ್ಥಿ ಸೇರಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 15:46 IST
Last Updated 23 ಫೆಬ್ರುವರಿ 2026, 15:46 IST
   

ಬೆಂಗಳೂರು: ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ವಿದ್ಯಾರ್ಥಿ ಸೇರಿ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಕೆ.ಆರ್‌.ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆ.ಆರ್‌.ಪುರ ನಿವಾಸಿಗಳಾದ ನಿತಿನ್‌ (21) ಮತ್ತು ಪುನೀತ್‌ (25) ಮೃತರು. ಸೋಮವಾರ ಮುಂಜಾನೆ 2 ಗಂಟೆ ಸುಮಾರಿಗೆ ಕೆ.ಆರ್‌.ಪುರದ ಹಳೇ ಮದ್ರಾಸ್‌ ರಸ್ತೆಯ ಬೂದಿಗೆರೆ ಸೇತುವೆ ಬಳಿ ದುರ್ಘಟನೆ ನಡೆದಿದೆ. ಮೃತರ ಪೈಕಿ ನಿತಿನ್‌ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ, ಪುನೀತ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ನಿತಿನ್‌ ತನ್ನ ದ್ವಿಚಕ್ರ ವಾಹನದಲ್ಲಿ ಪುನೀತ್‌ ಜತೆ ಹೊಸಕೋಟೆ ಕಡೆಯಿಂದ ಕೆ.ಆರ್‌.ಪುರ ಕಡೆಗೆ ಹಳೆ ಮದ್ರಾಸ್‌‍ ರಸ್ತೆಯ ಬೂದಿಗೆರೆ ಸೇತುವೆ ಮೇಲೆ ಹೋಗುತ್ತಿದ್ದರು. ಅದೇ ಸಮಯದಲ್ಲಿ ಅತೀ ವೇಗವಾಗಿ ಬಂದ  ವಾಹನ ನಿತಿನ್‌ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಸಂಚಾರ ಪೊಲೀಸರು ತಿಳಿಸಿದರು. 

ADVERTISEMENT

ನಂತರ ಗಾಯಾಳುಗಳನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. 

ಕೆ.ಆರ್‌.ಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಾಹನ ಚಾಲಕ ಮಂಜುನಾಥ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತಕ್ಕೆ ಬೊಲೆರೋ ವಾಹನದ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.