ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ 2010ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ 8 ವರ್ಷ ಜೈಲು ಶಿಕ್ಷೆ ಹಾಗೂ ₹ 4 ಲಕ್ಷ ದಂಡ ವಿಧಿಸಿ ನಗರದ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಇದೇ ಪ್ರಕರಣದಲ್ಲಿ ಯಾಸಿನ್ ಭಟ್ಕಳ್ ಸಹಚರ ಸೇರಿದಂತೆ ನಾಲ್ವರಿಗೆ 2018ರಲ್ಲೇ 7 ವರ್ಷಗಳ ಜೈಲು ಶಿಕ್ಷೆ ಆಗಿತ್ತು. ಇದೀಗ ಮತ್ತಿಬ್ಬರು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇನ್ನು ನಾಲ್ವರು ಆರೋಪಿಗಳಿದ್ದು, ವಿಚಾರಣೆ ಮುಂದುವರಿದಿದೆ.
‘ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಫ್ತಾಬ್ ಆಲಂ ಅಲಿಯಾಸ್ ಫಾರೂಕ್ ಹಾಗೂ ಅಹಮ್ಮದ್ ಜಮಾಲ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.ಅವರಿಬ್ಬರೂ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದರು. ಅದನ್ನು ಮನ್ನಿಸಿದ ನ್ಯಾಯಾಲಯ, ಅವರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಸದಸ್ಯರಾಗಿದ್ದ ಈ ಅಪರಾಧಿಗಳು, ದೆಹಲಿಯ ಜಾಮೀಯಾನಗರದ ಮನೆಯೊಂದರಲ್ಲಿ ವಾಸವಿದ್ದುಕೊಂಡು ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದರು. ಪ್ರತ್ಯೇಕ ತಂಡಗಳಾಗಿ ಬೆಂಗಳೂರಿಗೆ ಬಂದಿದ್ದ ಅಪರಾಧಿಗಳು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯೇ ನಾಲ್ಕು ಕಡೆ ಬಾಂಬ್ ಇಟ್ಟಿದ್ದರು. ಅದರಲ್ಲಿ ಒಂದು ಬಾಂಬ್ ಸ್ಫೋಟಗೊಂಡಿತ್ತು. ಉಳಿದ ಮೂರು ಬಾಂಬ್ಗಳನ್ನು ಪೊಲೀಸರೇ ಪತ್ತೆ ಮಾಡಿ ನಿಷ್ಕ್ರಿಯಗೊಳಿಸಿದ್ದರು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.