ADVERTISEMENT

ಹುಟ್ಟಿದ್ದು ಒಕ್ಕಲಿಗರಾಗಿ, ಬದುಕಿದ್ದು ವಿಶ್ವಮಾನವರಾಗಿ: ಡಿ.ಕೆ. ಶಿವಕುಮಾರ್‌

ಕೆಂಪೇಗೌಡರ ಸಾಧನೆಗಳು ಶಾಶ್ವತ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 16:15 IST
Last Updated 27 ಜೂನ್ 2025, 16:15 IST
<div class="paragraphs"><p>ಡಿ.ಕೆ ಶಿವಕುಮಾರ್‌</p></div>

ಡಿ.ಕೆ ಶಿವಕುಮಾರ್‌

   

ಫೇಸ್‌ಬುಕ್‌ ಚಿತ್ರ

ಬೆಂಗಳೂರು: ‘ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ ಸಾಧನೆಗಳು ಶಾಶ್ವತ. ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು, ಸಮಾಜಕ್ಕೆ ಸಂದೇಶ ನೀಡಿದ್ದು ವಿಶ್ವಮಾನವರಾಗಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ADVERTISEMENT

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ‘ಕೆಂಪೇಗೌಡ ಭವನʼದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಫೂರ್ತಿ. 500 ವರ್ಷಗಳ ಹಿಂದೆಯೇ ಎಲ್ಲ ಜಾತಿ, ಧರ್ಮಗಳಿಗೆ ಅವಕಾಶ ನೀಡಿ ಸಮಾಜಕ್ಕೆ ಸಂದೇಶ ನೀಡಿದವರು’ ಎಂದು ತಿಳಿಸಿದರು.

‘ನಾವು ಯಾರೂ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡಿರುವುದಿ‌ಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕೆ ಹೊರತು, ಧರ್ಮದಲ್ಲಿ ರಾಜಕೀಯ ಇರಬಾರದು ಎನ್ನುವ ಮಾತನ್ನು ಮರೆಯಬಾರದು. ಕೆಂಪೇಗೌಡರು ಎಲ್ಲಾ ಸಮುದಾಯಕ್ಕೆ ಸೇರಿದವರು. ಇವರು ನಾಡಿನ ಆಸ್ತಿ, ಎಲ್ಲ ಸಮಾಜದ ಆಸ್ತಿ’ ಎಂದು ಹೇಳಿದರು.

‘ಕೆಂಪೇಗೌಡರ ಭವನ ನಿರ್ಮಾಣಕ್ಕೆ ಐದು ಎಕರೆ ಜಮೀನು ನೀಡಲು ಒಂದೇ ವಾರದಲ್ಲಿ ಸಚಿವ ಸಂಪುಟದ ಮುಂದೆ ತಂದು ಒಪ್ಪಿಗೆ ಪಡೆಯಲಾಯಿತು. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನು ಸಚಿವರಾದ ಮಹದೇವಪ್ಪ ಅವರಿಂದ ಒಪ್ಪಿಗೆ ಪಡೆದು ಈಗ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಕೂಡ ನಿರ್ಮಾಣ ಮಾಡಲಾಗುತ್ತಿದೆ. ಕೆಂಪೇಗೌಡರ ಹೆಸರಿನಲ್ಲಿ ಭವ್ಯ ಕಟ್ಟಡ ನಿರ್ಮಾಣಕ್ಕೆ ₹100 ಕೋಟಿ ಮೀಸಲಿಟ್ಟಿದ್ದೇವೆ’ ಎಂದರು.

‘ಸ್ಟೇಡಿಯಂಗಾಗಿ 50 ಎಕರೆ ಜಾಗ’

‘ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಷ್ಟು ಸಾಮರ್ಥ್ಯದ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 50 ಎಕರೆ ಜಾಗ ಗುರುತಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿಪಡಿಸಬೇಕು. ಪ್ರತಿ ವರ್ಷ ಇಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು’ ಎಂದು
ಹೇಳಿದರು.

‘ಕೆಂಪೇಗೌಡ ಥೀಮ್ ಪಾರ್ಕ್ ಯೋಜನೆ ಜವಾಬ್ದಾರಿಯನ್ನು ಸಚಿವ ಕೃಷ್ಣ ಬೈರೇಗೌಡ ವಹಿಸಿ ಕೊಂಡಿದ್ದಾರೆ. ಈ ಯೋಜನೆಗೆ ಅನುದಾನ ಸಿಕ್ಕಿರಲಿಲ್ಲ. ಈಗ ಅದನ್ನು ಸರಿಪಡಿಸಲಾಗಿದ್ದು, ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಅಂತಿಮ ರೂಪ ನೀಡಲಾಗುವುದು’ ಎಂದು ಹೇಳಿದರು.

‘ಮೂರು ‘ಕೆ’ಗಳನ್ನು ಮರೆಯಬಾರದು’

‘ನಾವು ಮೂರು ‘ಕೆರೆಗಳನ್ನು ಮರೆಯಬಾರದು. ಬೆಂಗಳೂರು ಕಟ್ಟಿದ ಕೆಂಪೇಗೌಡರು, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಹಾಗೂ  ವಿಕಾಸಸೌಧ ಕಟ್ಟಿದ ಎಸ್.ಎಂ.ಕೃಷ್ಣ ಅವರು ನಗರದ ಅಭಿವೃದ್ಧಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದವರು. ಇವರನ್ನು ನಾವು ಯಾವಾಗಲೂ ಅವರನ್ನು ಸ್ಮರಿಸಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

‘ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸುಮಾರು ₹1 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.