ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ
ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮದ ಅಂಗವಾಗಿ ಜನವರಿ 17ರಿಂದ 19ರವರೆಗೆ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ‘ವಿಶ್ವಾಮಿತ್ರ’ ಎಂಬ ಘೋಷವಾಕ್ಯದಡಿಯಲ್ಲಿ ಬ್ರಾಹ್ಮಣ ಮಹಾ ಸಮ್ಮೇಳನ ನಡೆಯಲಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಅಧ್ಯಕ್ಷ ಅಶೋಕ ಹಾರನಹಳ್ಳಿ, ‘ಮೂರು ದಿನ ನಡೆಯುವ ಸಮ್ಮೇಳನದಲ್ಲಿ ರಾಜ್ಯದಲ್ಲಿ ಅಗ್ನಿಹೋತ್ರ ಮಾಡುವ 18 ಮಂದಿಯನ್ನು ಗೌರವಿಸಲಾಗುವುದು. ಪಾವಗಡ ಪ್ರಕಾಶರಾವ್ ನೇತೃತ್ವದಲ್ಲಿ ಸನಾತನ ಧರ್ಮಕ್ಕೆ ಆಚಾರ್ಯತ್ರಯರ ಕೊಡುಗೆಗಳ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಆಹಾರ ಮೇಳ, ವಾಣಿಜ್ಯ ಮೇಳವೂ ನಡೆಯಲಿದೆ. 150ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಕಲಾವಿದರಿಂದ ವಿವಿಧ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದು ಹೇಳಿದರು.
‘ಜ. 17ರಂದು ಸಂಜೆ 5.30ಕ್ಕೆ ಗಾಯತ್ರಿ ಮಹಾಯಾಗದ ಕಲಶ ಸ್ಥಾಪನೆ, ಗಾಯತ್ರಿ ಜಪ ಪ್ರಾರಂಭವಾಗಲಿದೆ. ಜ.18ರಂದು ಬೆಳಿಗ್ಗೆ 11.30ಕ್ಕೆ ಶೃಂಗೇರಿ ಶಾರದಾಪೀಠದ ವಿಧುಶೇಖರಭಾರತೀ ಸ್ವಾಮೀಜಿ ಅವರು ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಮೂರು ದಿನಗಳ ಸಮ್ಮೇಳನದಲ್ಲಿ ವಿವಿಧ ಮಠಾಧೀಶರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯ ಸಚಿವರು, ವಿವಿಧ ಕ್ಷೇತ್ರಗಳ ಪ್ರಮುಖರು ಪಾಲ್ಗೊಳ್ಳುತ್ತಾರೆ’ ಎಂದರು.
ಸಮ್ಮೇಳನದಲ್ಲಿ ವಿಪ್ರ ಸಾಧಕರಿಗೆ ‘ಬ್ರಹ್ಮತೇಜ’ ಹಾಗೂ ‘ವಾಣಿಜ್ಯ ರತ್ನ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. 50 ಸಾವಿರದಿಂದ 1 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.
ಭಾನುಪ್ರಕಾಶ್ ಶರ್ಮಾ, ಶಾಸಕ ಟಿ.ಎಸ್. ಶ್ರೀವತ್ಸ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್. ಶ್ರೀಧರಮೂರ್ತಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.