ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಸಲಹೆಗಳನ್ನು ನೀಡುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.
ಸಲಹೆ ನೀಡಲು ಜೂನ್ 30ರ ವರೆಗೆ ಅವಧಿ ನೀಡಲಾಗಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಈ ಬಗ್ಗೆ ಸರ್ವ ಪಕ್ಷಗಳ ಶಾಸಕರ ಜತೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಜೊತೆ ಸಭೆ ನಡೆಸಿದ್ದರು. ಸಾರ್ವಜನಿಕರಿಗೆ ವೆಬ್ ಫೋರ್ಟಲ್ www.brandbengaluru.karnataka.gov.in ನೀಡಲಾಗಿತ್ತು. ನಿರೀಕ್ಷೆ ಮೀರಿ ಸಲಹೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ.
ಬೆಂಗಳೂರಿನ ಅಭಿವೃದ್ಧಿಗಾಗಿ ಏಳು ವಿಚಾರಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ಸಾರ್ವಜನಿಕರು #BrandBengaluru, #BetterBengaluru ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ವೆಬ್ ಪೋರ್ಟಲ್ ಅಲ್ಲದೇ ವಾಟ್ಸ್ಆ್ಯಪ್ (9480685700) ಮೂಲಕವೂ ಅಭಿಪ್ರಾಯ ಹಂಚಿಕೊಳ್ಳಬಹುದು. ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 1533ಗೆ ಕರೆ ಮಾಡಬಹುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.