ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಎಸ್.ಎಂ. ಶ್ರೀನಿವಾಸ್ ಮತ್ತು ಅವರ ಆಪ್ತ ಸಹಾಯಕ ಉಮೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸ್ಥಿರಾಸ್ತಿಗಳ ಖಾತೆ ವಿಲೀನ ಪ್ರಕ್ರಿಯೆ ಪೂರೈಸಲು ₹ 4 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರನ್ನೂ ಸೋಮವಾರ ಸಂಜೆ ಬಂಧಿಸಲಾಗಿತ್ತು. ಸ್ಥಳ ಮಹಜರು ಹಾಗೂ ಹಣ ವಶಕ್ಕೆ ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಶ್ರೀನಿವಾಸ್ ಮತ್ತು ಉಮೇಶ್ ಅವರನ್ನು ಲೋಕಾಯುಕ್ತ ಕಚೇರಿಗೆ ಕರೆತರಲಾಗಿತ್ತು.
ದೂರುದಾರ ಮಂಜುನಾಥ್ ಅವರ ಅರ್ಜಿ ಬಾಕಿ ಇರುವುದು, ಅವರನ್ನು ಭೇಟಿ ಮಾಡಿರುವುದು, ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಹಣ ಪಡೆದುಕೊಂಡಿರುವ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸಲಾಯಿತು. ಕೆಲವು ಗಂಟೆಗಳ ಕಾಲ ಇಬ್ಬರನ್ನೂ ಪ್ರಶ್ನಿಸಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.
ವಿಚಾರಣೆ ಪೂರ್ಣಗೊಳಿಸಿ ತಡರಾತ್ರಿ ಇಬ್ಬರನ್ನೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ನಂತರ ಆರೋಪಿಗಳನ್ನು ಕರೆದೊಯ್ದ ಲೋಕಾಯುಕ್ತ ಪೊಲೀಸರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಶಕ್ಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.