ADVERTISEMENT

ಬೈಕ್‌ ಬಿಡುಗಡೆಗೆ ಲಂಚ: ಹೆಡ್‌ ಕಾನ್‌ಸ್ಟೆಬಲ್‌ಗೆ ನಾಲ್ಕು ವರ್ಷ ಜೈಲು

ಬೈಕ್‌ ಬಿಡುಗಡೆಗೆ ಲಂಚದ ಆರೋಪ ಸಾಬೀತು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 18:14 IST
Last Updated 29 ಸೆಪ್ಟೆಂಬರ್ 2021, 18:14 IST
   

ಬೆಂಗಳೂರು: ಪ್ರಕರಣವೊಂದರಲ್ಲಿ ಬಂಧಿತರಾಗಿದ್ದ ಆರೋಪಿಯ ದ್ವಿಚಕ್ರ ವಾಹನ ಬಿಡುಗಡೆಗೆ ₹ 10,000 ಲಂಚ ಪಡೆದ ಆರೋಪದ ಪ್ರಕರಣದಲ್ಲಿ ನಗರದ ಬಾಗಲಗುಂಟೆ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಎಂ.ಕೆ. ದೋಷಿ ಎಂದು ಸಾರಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, ಅಪರಾಧಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿದೆ.

2017ರ ಜುಲೈ ತಿಂಗಳಿನಲ್ಲಿ ಬಾಗಲಗುಂಟೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು. ಅವರ ಬೈಕ್‌ ಅನ್ನೂ ಪೊಲೀಸರು ವಶಪಡಿಸಿಕೊಂಡಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆ ವ್ಯಕ್ತಿ, ತಮ್ಮ ಬೈಕ್‌ ಮರಳಿಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದರು.

ಬೈಕ್‌ ನೀಡಲು ₹ 20,000 ಲಂಚ ಕೊಡುವಂತೆ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೈಕ್‌ ಮಾಲೀಕ ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. 2017ರ ಜುಲೈ 15ರಂದು ದೂರುದಾರರಿಂದ ₹ 10,000 ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೆಬಲ್‌ ಬಂಧಿಸಿದ್ದ ಎಸಿಬಿ ಅಧಿಕಾರಿಗಳು, 2018ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ADVERTISEMENT

ಮೂರು ವರ್ಷಗಳಿಂದಲೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಬುಧವಾರ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ‘ಮಂಜಣ್ಣ ದೋಷಿ’ ಎಂದು ಸಾರಿದರು. ಅಪರಾಧಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.