ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಯಲಹಂಕ ನಿವಾಸಿಯಾದ ಕಾಲೇಜು ವಿದ್ಯಾರ್ಥಿನಿ ಎಂ.ಲಕ್ಷ್ಮಿ (21) ಮೃತಪಟ್ಟಿದ್ದಾರೆ.
ಬಿಎಸ್ಸಿ ನಾಲ್ಕನೇ ಸೆಮಿಸ್ಟರ್ ಓದುತ್ತಿದ್ದ ಅವರು ಗೆಳತಿ ಸಿಂಚನಾ ಜತೆ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದರು. ಸಿಂಚನಾ ಅವರ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಹಿಂದಿನಿಂದ ಡಿಕ್ಕಿ ಹೊಡೆಯಿತು. ಈ ವೇಳೆ ಸಿಂಚನಾ ಮತ್ತು ಲಕ್ಷ್ಮಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದರು. ತೀವ್ರವಾಗಿ ಗಾಯಗೊಂಡ ಲಕ್ಷ್ಮಿ ಸ್ಥಳದಲ್ಲೇ ಮೃತಪಟ್ಟರು.
ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಸಿಂಚನಾ ಅವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು. ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ. ಆತನನ್ನು ಬಂಧಿಸಿ ಟ್ರ್ಯಾಕ್ಟರ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಸಂಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.