ಬೆಂಗಳೂರು: ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಅತಿ ಹಿಂದುಳಿದ ಕಾಯಕ ಸಮುದಾಯಗಳ ನಾಯಕ ಪುಟ್ಟಸಿದ್ದಶೆಟ್ಟಿ ಮಂಗಳವಾರ ಬಹುಜನ ಸಮಾಜ ಪಾರ್ಟಿಗೆ(ಬಿಎಸ್ಪಿ) ಸೇರ್ಪಡೆಯಾದರು.
ನಂತರ ಮಾತನಾಡಿದ ಪುಟ್ಟಸಿದ್ದಶೆಟ್ಟಿ, ‘ಕಾಂಗ್ರೆಸ್ ಪಕ್ಷದಲ್ಲಿ ಮೇಲ್ವರ್ಗದವರಿಗೆ ಮಾತ್ರ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ. ಜೊತೆಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಬಣಗಳ ಮಧ್ಯೆ ನಡೆಯುವ ಜಗಳದಿಂದ ಜನ ಬೇಸತ್ತಿದ್ದಾರೆ. ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಪಡೆಯುವುದಕ್ಕೆ ಸೀಮಿತವಾಗಿದೆ. ಜೆಡಿಎಸ್ ಎಂಬುದು ಕೇವಲ ಒಂದು ಕುಟುಂಬಕ್ಕೆ ಸೀಮಿತವಾದ ಪಕ್ಷವಾಗಿ ಮಾರ್ಪಟ್ಟಿದೆ’ ಎಂದು ಲೇವಡಿ ಮಾಡಿದರು.
‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಿಲ್ಲಿ ಬಿಎಸ್ಪಿ ಪಕ್ಷ ಸ್ಪರ್ಧಿಸಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ 100 ವಿಧಾನಸಭಾ ಕ್ಷೇತ್ರಗಳಲ್ಲಿ ಅವಕಾಶ ನೀಡಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಪ್ರಾತಿನಿಧ್ಯವನ್ನೇ ಪಡೆಯದ ಹಿಂದುಳಿದ ಕಾಯಕ ಸಮುದಾಯಗಳವರು ಕನಿಷ್ಠ 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ’ ಎಂದು ಪಕ್ಷದ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಮಾಹಿತಿ ನೀಡಿದರು.
ರಾಜ್ಯ ಸಂಯೋಜಕ ಎಂ. ಗೋಪಿನಾಥ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ. ಕೃಷ್ಣಮೂರ್ತಿ, ಆರ್. ಮುನಿಯಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.