ಬೆಂಗಳೂರು: ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯದ ಡಿಜಿಟಲೀಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಭಗವಾನ್ ಬುದ್ಧ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬಜೆಟ್ನಲ್ಲಿ ₹100 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಬುದ್ಧ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.
ಮನುಷ್ಯ ಮನುಷ್ಯರ ನಡುವೆ ದ್ವೇಷ, ಅಸೂಯೆ ಬೆಳೆಯುತ್ತಿರುವ ಇಂದಿನ ಸಂದರ್ಭದಲ್ಲಿ ಬುದ್ಧರ ತತ್ವಾದರ್ಶಗಳು ಮಾರ್ಗದರ್ಶನ ನೀಡುತ್ತಿವೆ. ರಾಜರು ರಾಜರಾಗಿರಲು ಮಾತ್ರ ಬಯಸುತ್ತಾರೆ. ರಾಜತ್ವದಿಂದ ಮನುಷ್ಯನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಜೀವನ ನಡೆಸುವುದು ಅಸಾಮಾನ್ಯ ಸಂಗತಿ ಎಂದರು.
ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಹಡ್ಸನ್ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ಕಲಾತಂಡಗಳೊಂದಿಗೆ ಬುದ್ಧನ ಭಾವಚಿತ್ರದೊಂದಿಗೆ ಮೆರವಣಿಗೆ ಮಾಡಲಾಯಿತು.
ಸಮಾರಂಭದಲ್ಲಿ ಬೌದ್ಧ ಮಹಾಸಭಾದ ಬೋಧಿದತ್ತ ಭಂತೇಜಿ, ಬುದ್ದದತ್ತ ಭಂತೇಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ, ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.