ADVERTISEMENT

ಅನಧಿಕೃತ ಕಟ್ಟಡಕ್ಕೆ ಕಡಿವಾಣ ದಿಢೀರನೆ ಕರಡು ಹಿಂದಕ್ಕೆ

ಕಟ್ಟಡ ನಿಯಮ ಉಲ್ಲಂಘನೆಗೆ ನೆರವಾಗುವ ಅಧಿಕಾರಿಗಳಿಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2019, 4:12 IST
Last Updated 8 ಜುಲೈ 2019, 4:12 IST
   

ಬೆಂಗಳೂರು: ಅನಧಿಕೃತ ಕಟ್ಟಡಗಳು ನಿರ್ಮಾಣವಾಗದಂತೆ ತಡೆಯುವಲ್ಲಿ ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಹೊರಡಿಸಿದ್ದ ಕರಡು ಅಧಿಸೂಚನೆಯನ್ನು ನಗರಾಭಿವೃದ್ಧಿ ಇಲಾಖೆ ಸದ್ದಿಲ್ಲದೆ ಹಿಂದಕ್ಕೆ ಪಡೆದಿದೆ. ಇದರಿಂದ ಕಟ್ಟಡ ನಿಯಮ ಉಲ್ಲಂಘನೆ ತಡೆಯುವ ಪ್ರಯತ್ನಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುವ ಪ್ರವೃತ್ತಿಯಿಂದಾಗಿ ನಗರದ ಯೋಜಿತ ಅಭಿವೃದ್ಧಿ ಹಾದಿ ತಪ್ಪಿತ್ತು. ಅಧಿಕಾರಿಗಳ ಕೃಪಾಕಟಾಕ್ಷದಿಂದಲೇ ಒತ್ತುವರಿ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿದ್ದವು. ಇದಕ್ಕೆ ಕಡಿವಾಣ ಹಾಕಲು ಸರ್ಕಾರವು ಅಧಿಕಾರಿಗಳನ್ನೂ ಶಿಕ್ಷೆಗೆ ಒಳಪಡಿಸಲು ಮುಂದಾಗಿತ್ತು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸು ವ ಸಲುವಾಗಿ ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಷನ್‌ ಕಾಯ್ದೆ 1976ಕ್ಕೆ ತಿದ್ದುಪಡಿ ತಂದು 12 ವರ್ಷಗಳ ಬಳಿಕ ಸರ್ಕಾರ ನಿಯಮ ರೂಪಿಸಲು ಮುಂದಾಗಿತ್ತು. ₹ 2000 ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವಂತೆ ಕರಡು ನಿಯಮ ರೂಪಿಸಿ2018ರ ನವೆಂಬರ್‌ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಿತ್ತು. 52 ಬಗೆಯ ಉಲ್ಲಂಘನೆಗಳಿಗೆ ಶಿಕ್ಷೆ ವಿಧಿಸಲು ಕರಡಿನಲ್ಲಿ ಅವಕಾಶ ಇದೆ. ಇದಕ್ಕೆ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸುವ ಅಂತಿಮ ದಿನಾಂಕವನ್ನು ಎರಡು ಬಾರಿ ವಿಸ್ತರಿಸಿತ್ತು.

ADVERTISEMENT

ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಲು ಅವಕಾಶ ಕಲ್ಪಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ನಾಮ ಕೃಷ್ಣಯ್ಯ ಅವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಕುರಿತು ನಿಯಮ ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಆ ಬಳಿಕವಷ್ಟೇ ಸರ್ಕಾರ ಕರಡು ನಿಯಮಗಳನ್ನು ರೂಪಿಸಿ ಅಧಿಸೂಚನೆ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.