ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿಯ ಸದಸ್ಯರು ಭಾಗವಹಿಸಿದ್ದರು
–ಪ್ರಜಾವಾಣಿ ಚಿತ್ರ
ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿಯ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳಿಗೆ ಮಂಜೂರಾಗಿದೆ. ಆದರೆ, ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನ ಜಮೆ ಆಗಿಲ್ಲ. ಇಲಾಖೆಯಲ್ಲಿ ಇಂತಹ ಸಾವಿರಾರು ಪ್ರಕರಣಗಳಿದ್ದು, ಫಲಾನುಭವಿಗಳ ಖಾತೆಗೆ ಕೂಡಲೇ ಹಣ ಜಮೆ ಮಾಡಬೇಕು. ಪಿಂಚಣಿ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡುವುದರ ಜೊತೆಗೆ ವಾರ್ಷಿಕವಾಗಿ ₹500 ಹೆಚ್ಚಿಸಬೇಕು. ಕುಟುಂಬ ಪಿಂಚಣಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ಕಾರ್ಮಿಕ ಇಲಾಖೆಯಿಂದ ನೀಡುವ ವೈದ್ಯಕೀಯ ಪರಿಹಾರ ಮೊತ್ತವನ್ನು ₹5 ಲಕ್ಷದವರೆಗೆ ಹೆಚ್ಚಿಸಬೇಕು. ಸಹಜವಾಗಿ ಮರಣ ಹೊಂದುವ ಫಲಾನುಭವಿಗಳ ಪರಿಹಾರ ಮೊತ್ತವನ್ನು ₹75 ಸಾವಿರದಿಂದ ₹2 ಲಕ್ಷಕ್ಕೆ ಹೆಚ್ಚಿಸಬೇಕು. ಲ್ಯಾಪ್ಟಾಪ್, ಪ್ಯಾಡ್ ಖರೀದಿಸಲಾಗಿದೆ. ಇದರಲ್ಲಿ ಸಾಕಷ್ಟು ಭ್ರಷ್ಟಾಚಾರವಾಗಿದೆ. ನ್ಯಾಯಾಂಗ ತನಿಖೆ ನಡೆಸಬೇಕು. ಇಲಾಖೆಯಲ್ಲಿ ಟೆಂಡರ್ ಆಧಾರಿತ ಖರೀದಿಯನ್ನು ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು.
ಎಐಟಿಯುಸಿ ರಾಜ್ಯ ಸಮಿತಿ ಅಧ್ಯಕ್ಷ ಎಚ್.ಜಿ. ಉಮೇಶ್, ಸಿಐಟಿಯು ರಾಜ್ಯ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್, ಎನ್ಸಿಎಲ್ನ ಅಧ್ಯಕ್ಷ ಎನ್.ಪಿ. ಸಾಮಿ, ಲೀಲಾವತಿ, ಗಿರೀಶ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ನೂರಾರು ಕಾರ್ಮಿಕರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.