ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಅಥವಾ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಗೆ ದುಪ್ಪಟ್ಟು ದಂಡವನ್ನು ವಿಧಿಸುವ ಉದ್ದೇಶದ ಕರ್ನಾಟಕ ನಗರಪಾಲಿಕೆಗಳ ಅಧಿನಿಯಮಕ್ಕೆ ತಿದ್ದುಪಡಿ ತರಲು ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ರಾಜ್ಯದ ಇತರ ಸ್ಥಳೀಯ ಸಂಸ್ಥೆಗಳಲ್ಲಿ ದುಪ್ಪಟ್ಟು ತೆರಿಗೆ ಸಂಗ್ರಹಿಸುವ ವ್ಯವಸ್ಥೆ ಜಾರಿಯಲ್ಲಿದ್ದು, ಬೆಂಗಳೂರು ಮಹಾನಗರದಲ್ಲಿ
ಆ ವ್ಯವಸ್ಥೆ ಜಾರಿಗಾಗಿ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡಿಸಲಾಗಿದೆ.
ಅಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಕಿರುವ ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಒಳಗೊಂಡಂತೆ ಎಲ್ಲ ರೀತಿಯ ಕೇಬಲ್ಗಳ ಮೇಲೆ ಶುಲ್ಕ ಅಥವಾ ವಾರ್ಷಿಕ ಟ್ರಾಕ್ ಬಾಡಿಗೆಯನ್ನು ವಿಧಿಸಲೂ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಕಾನೂನು ವಿದ್ಯಾಲಯದಲ್ಲಿ ಶೇ 25 ಮೀಸಲು: ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯದ ಕೋರ್ಸ್ಗಳ ಪ್ರವೇಶದಲ್ಲಿ ಕರ್ನಾಟಕದ ವಿದ್ಯಾರ್ಥಿ ಗಳಿಗೆ ಶೇ 25ರಷ್ಟು ಮೀಸಲು ನೀಡುವ ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ ತಿದ್ದುಪಡಿ ಮಸೂದೆಯನ್ನೂ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಂಡಿಸಿದರು.
ಈ ವಿದ್ಯಾಲಯದಲ್ಲಿ ‘ಕರ್ನಾಟಕದ ವಿದ್ಯಾರ್ಥಿ’ಗಳಿಗೆ ಈ ಅವಕಾಶ ಸಿಗದೇ ಇರುವ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸಲು ಮಸೂದೆ ತರಲಾಗಿದೆ. ಕಾನೂನು ವಿದ್ಯಾಲಯದಲ್ಲಿ ಅರ್ಹತಾ ಪರೀಕ್ಷೆಗೂ ಹಿಂದಿನ ಹತ್ತು ವರ್ಷಗಳಿಗೆ ಕಡಿಮೆ ಇಲ್ಲದ ಅವಧಿಯಲ್ಲಿ ರಾಜ್ಯದ ಯಾವುದಾದರೂ ಒಂದು ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರಬೇಕು ಎಂದು ಅವರು ಹೇಳಿದರು.
ರಾಜ್ಯದಲ್ಲಿ ನಾವೀನ್ಯತಾ ತಂತ್ರಜ್ಞಾನಗಳನ್ನು ಉತ್ತೇಜಿಸಲು ಮತ್ತು ನಿಯಂತ್ರಿಸುವ ಉದ್ದೇಶಕ್ಕೆ ನಾವೀನ್ಯತಾ ಪ್ರಾಧಿಕಾರ ಸ್ಥಾಪನೆಗಾಗಿ ಮಸೂದೆ ಮಂಡಿಸಲಾಗಿದೆ.
ಇತರ ಮಸೂದೆಗಳು
*ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ (ತಿದ್ದುಪಡಿ) ಮಸೂದೆ
*ಕರ್ನಾಟಕ ಲೋಕಾಯಕ್ತ ತಿದ್ದುಪಡಿ ಮಸೂದೆ
*ಕರ್ನಾಟಕ ರಾಜ ಭಾಷಾ ತಿದ್ದುಪಡಿ ಮಸೂದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.