ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕಾರು ಖರೀದಿಸಿ ಸಾಲದ ಕಂತು ಪಾವತಿಸಲಾಗದೆ ಮನನೊಂದು ಕ್ಯಾಬ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ದೇವರಾಜ್ (21) ಆತ್ಮಹತ್ಯೆ ಮಾಡಿಕೊಂಡ ಚಾಲಕ.
ದೇವರಾಜ್ ಚಿಕ್ಕಬಾಣಾವಾರದ ಗಣಪತಿ ನಗರದ ಬಾಡಿಗೆ ಮನೆಯಲ್ಲಿ ನೆಲಸಿದ್ದರು. ವರ್ಷದ ಹಿಂದೆ ಬ್ಯಾಂಕ್ನಿಂದ ಸಾಲ ಪಡೆದು ಕಾರು ಖರೀದಿಸಿ ಬಾಡಿಗೆಗೆ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ಇತ್ತೀಚೆಗೆ ಸರಿಯಾಗಿ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಹಾಗಾಗಿ ಎರಡು ತಿಂಗಳಿನಿಂದ ಸಾಲದ ಕಂತು ಪಾವತಿಸಿರಲಿಲ್ಲ. ಬ್ಯಾಂಕ್ ಸಿಬ್ಬಂದಿ ಸಾಲದ ಬಾಕಿ ಕಂತು ಪಾವತಿಸುವಂತೆ ನೋಟಿಸ್ ಜಾರಿಗೊಳಿಸಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೆ ಮನನೊಂದು ಏಪ್ರಿಲ್ 29ರಂದು ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.