ಬೆಂಗಳೂರು: ಟಿ.ವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳು ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯ್ದೆಗೆ ಅನುಗುಣವಾಗಿರಬೇಕು ಎಂದು ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ.
ಮಾಧ್ಯಮಗಳು ಖಾಸಗಿತನಕ್ಕೂ ಪ್ರವೇಶ ಮಾಡುವ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ಕುಮಾರ್ ಅವರಿದ್ದ ಪೀಠ, ಈ ಆದೇಶ ನೀಡಿತು.
ಬಿಜೆಪಿ ಸದಸ್ಯ ಎಂದು ಹೇಳಿಕೊಂಡಿರುವ ಆತ್ಮ ವಿ. ಹಿರೇಮಠ ಅರ್ಜಿ ಸಲ್ಲಿಸಿದ್ದು, ‘ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಮಾಡಲಾದ ವಿಡಿಯೊ ಪ್ರಸಾರ ಅವರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗಿದೆ. ಕೆ.ಎಸ್. ಪುಟ್ಟಸ್ವಾಮಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಖಾಸಗಿತನದ ಹಕ್ಕಿನ ಬಗ್ಗೆ ತಿಳಿಸಿದೆ’ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
‘ಖಾಸಗಿತನದ ಹಕ್ಕು ಕಸಿದುಕೊಂಡಿರುವವರ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್(ನಿಯಂತ್ರಣ) ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೂ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.