ADVERTISEMENT

ಹೆಸರಘಟ್ಟ: ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 20:24 IST
Last Updated 15 ನವೆಂಬರ್ 2020, 20:24 IST

ಹೆಸರಘಟ್ಟ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಕೊರತೆ ಎದ್ದು ಕಾಣುತ್ತಿತ್ತು. ಕೋವಿಡ್‌ ಕಾರಣ ಹೆಚ್ಚು ಜನರು ಸಭೆಯತ್ತ ಬರಲಿಲ್ಲ. ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಮತ್ತು ಬೆರಳೆಣಿಕೆಯಷ್ಟು ಗ್ರಾಮಸ್ಥರು ಮಾತ್ರ ಭಾಗವಹಿಸಿದ್ದರು.

‘ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6ರಿಂದ 7 ಅಂತಸ್ತಿನ ಮನೆಗಳು ನಿರ್ಮಾಣವಾಗುತ್ತಿವೆ. ಬಹುಮಹಡಿಗಳನ್ನು ಕಟ್ಟಿ ಮನೆಗಳನ್ನು ಬಾಡಿಗೆ ನೀಡುತ್ತಿದ್ದಾರೆ. ಆದರೆ, ಈ ಕಟ್ಟಡಗಳ ಮಾಲೀಕರು ಪಂಚಾಯಿತಿಗೆ ಕಂದಾಯವನ್ನು ಕಟ್ಟುತ್ತಿಲ್ಲ. ಇಂತಹ ಅನಧಿಕೃತ ಕಟ್ಟಡಗಳ ಮಾಲೀಕರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕು’ ಎಂದು ಸುರಧೇನುಪುರ ಗ್ರಾಮದ ನಿವಾಸಿ ಮಾರಣ್ಣ ಅಗ್ರಹಿಸಿದರು.

ಅಭಿವೃದ್ಧಿ ಅಧಿಕಾರಿ ರಾಜೇಶ್, ‘ಅನಧಿಕೃತ ಕಟ್ಟಡಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ನಗರಾಭಿವೃದ್ದಿ ಇಲಾಖೆಗೆ ಪತ್ರ ಬರೆಯಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದು ಹೊಸದಾಗಿ ಸರ್ವೆ ಮಾಡುವ ಕೆಲಸ ಮಾಡುತ್ತಿದ್ದೇವೆ’ ಎಂದು ಉತ್ತರಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಪ್ಪ, ‘ಈ ವರ್ಷ ₹85 ಲಕ್ಷ ಅನುದಾನವನ್ನು ರಾಜಾನುಕುಂಟೆ ಗ್ರಾಮ ಪಂಚಾಯಿತಿಗೆ ನೀಡಲಾಗಿದೆ. ಈಗಾಗಲೇ ಅನೇಕ ಕಾಮಗಾರಿಗಳು ಪ್ರಾರಂಭವಾಗಿದ್ದು ಮುಕ್ತಾಯದ ಹಂತದಲ್ಲಿವೆ’ ಎಂದರು.

ಓದುವ ಬೆಳಕು ಕಾರ್ಯಕ್ರಮ ಅಡಿಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.