
ಬೆಂಗಳೂರು: ‘ಕ್ಯಾನ್ಸರ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಜನಪ್ರತಿನಿಧಿಗಳು ಕೂಡ ತಮ್ಮ ಕ್ಷೇತ್ರಗಳಲ್ಲಿ ಜಾಗೃತಿ ಜಾಥಾಗಳನ್ನು ನಡೆಸಬೇಕು. ಈ ಮೂಲಕ ರೋಗದ ನಿರ್ಮೂಲನೆಗೆ ಶ್ರಮಿಸಬೇಕು’ ಎಂದು ನಟಿ ಉಮಾಶ್ರೀ ಹೇಳಿದರು.
ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿದರು.
‘ಕ್ಯಾನ್ಸರ್ ನಿರ್ಮೂಲನೆಗೆ ಸರ್ಕಾರ ಹಾಗೂ ಸಂಘ–ಸಂಸ್ಥೆಗಳು ಹೆಚ್ಚು ಪ್ರೋತ್ಸಾಹ ನೀಡುತ್ತಿವೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಜಾಥಾಗಳನ್ನು ಏರ್ಪಡಿಸುವ ಮೂಲಕ ಅರಿವು ಮೂಡಿಸಬೇಕು. ಕ್ಯಾನ್ಸರ್ ತಪಾಸಣೆ ಹಾಗೂ ಪರೀಕ್ಷೆ ಸುಲಭವಾಗಿ ದೊರೆಯುವಂತಾಗಬೇಕು. ಆಗ ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತದೆ. ಜೀವನಶೈಲಿ ಬದಲಾಯಿಸಿಕೊಂಡು, ಉತ್ತಮ ಆಹಾರ, ವ್ಯಾಯಾಮದಿಂದ ಆರೋಗ್ಯ ಕಾಪಾಡಿಕೊಳ್ಳಬೇಕು. ಜನರು ಪ್ರತಿ ವರ್ಷ ಸ್ವಯಂಪ್ರೇರಿತವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು’ ಎಂದರು.
ಸಂಸ್ಥೆ ನಿರ್ದೇಶಕ ಡಾ.ಟಿ.ನವೀನ್, ‘ಸಂಸ್ಥೆಯ ವತಿಯಿಂದ ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ರೋಗದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಕ್ಯಾನ್ಸರ್ ಬಗ್ಗೆ ಭಯಪಡದೆ ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಮೂಲಕ ಈ ರೋಗದಿಂದ ಮುಕ್ತವಾಗಬಹುದು. ಪ್ರಾಥಮಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ರೋಗಿಯೂ ಅಲ್ಪಾವಧಿಯಲ್ಲಿ ಚೇತರಿಸಿಕೊಳ್ಳಬಹುದು’ ಎಂದು ಹೇಳಿದರು.
ಚಲನಚಿತ್ರ ನಟ ರಮೇಶ್ ಭಟ್, ‘ಸಾಮಾನ್ಯ ಜನರಿಗೆ ಕ್ಯಾನ್ಸರ್ ಶ್ರೀಮಂತ ಕಾಯಿಲೆಯಾಗಿ ಮಾರ್ಪಟ್ಟಿದೆ. ಈ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕು’ ಎಂದರು.
ಸಂಸ್ಥೆಯ ಆವರಣದಿಂದ ಲಾಲ್ಬಾಗ್ವರೆಗೆ ನಡೆದ ಜಾಥಾದಲ್ಲಿ ನರ್ಸಿಂಗ್ ಕಾಲೇಜಿನ ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರು, ಕರ್ನಾಟಕ ರಾಜ್ಯ ಶುಶ್ರೂಷಾ ಪರಿಷತ್ನ ಕುಲಸಚಿವ ಕೆ.ಮಲ್ಲು, ಸಂಸ್ಥೆಯ ವೈದ್ಯರಾದ ಡಾ.ಸುರೇಶ್ ಬಾಬು, ಡಾ.ಮಹಾಂತೇಶ್, ಡಾ.ವಿಜಯ್, ಡಾ.ಅರುಣ್ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.