ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಹಿಂಬದಿ ಸವಾರ ಮೃತಪಟ್ಟ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ರಾಮಣ್ಣ (40) ಮೃತರು. ಗಾಯಾಳು ರುದ್ರಸ್ವಾಮಿ (40) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ಫೊಸಿಸ್ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ರಾಮಣ್ಣ ಮತ್ತು ರುದ್ರಸ್ವಾಮಿ ಕೆಲಸ ಮಾಡುತ್ತಿದ್ದಾರೆ.
ಭಾನುವಾರ ಬೆಳಿಗ್ಗೆ 6.30ರ ಸುಮಾರಿಗೆ ಇಬ್ಬರೂ ಕೆಲಸಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ರುದ್ರಸ್ವಾಮಿ ಅವರು ಬೈಕ್ ಚಲಾಯಿಸುತ್ತಿದ್ದರು. ಹೊಸೂರು ಮುಖ್ಯರಸ್ತೆಯ ತಿಮ್ಮಾರೆಡ್ಡಿ ಶಾಲೆ ಮುಂಭಾಗ ತೆರಳುತ್ತಿದ್ದರು. ಈ ವೇಳೆ ಹಿಂಬದಿ ವೇಗವಾಗಿ ಬಂದ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ರಸ್ತೆ ವಿಭಜಕದ ಗ್ರಿಲ್ ಗೆ ಡಿಕ್ಕಿ ಹೊಡೆದು ಇಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಇಬ್ಬರನ್ನೂ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ ರಾಮಣ್ಣ ಚಿಕಿತ್ಸೆ ಫಲಿಸದೆ ಮೃತಪಟ್ಟರು. ರುದ್ರಸ್ವಾಮಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.