ADVERTISEMENT

ಮಾರಕಾಸ್ತ್ರಗಳಿಂದ ಹೊಡೆದು ಕಾರು ಜಖಂ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 21:19 IST
Last Updated 19 ಜನವರಿ 2020, 21:19 IST

ಬೆಂಗಳೂರು: ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದಿದ್ದು, ಕಾರು ಜಖಂಗೊಂಡಿದೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವೇ ಬಂಧಿಸಲಾಗುವುದು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಸ್ಥಳೀಯ ನಿವಾಸಿ ಶ್ರೀನಿವಾಸ್ ಎಂಬುವರು ಮನೆ ಎದುರು ಇನ್ನೋವಾ ಕಾರು ನಿಲ್ಲಿಸಿದ್ದರು. ಅದರ ಪಕ್ಕದಲ್ಲೇ ಬಾಡಿಗೆದಾರ ಮಧುಕರ್ ಎಂಬುವರ ಸ್ವಿಫ್ಟ್ ಕಾರು ಇತ್ತು. ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ಲಾಂಗು ಹಾಗೂ ಮಚ್ಚುಗಳಿಂದ ಶ್ರೀನಿವಾಸ್ ಅವರ ಕಾರಿಗೆ ಹೊಡೆದು ಜಖಂಗೊಳಿಸಿದ್ದಾರೆ‌. ಗಾಜುಗಳನ್ನು ಒಡೆದು ಹಾಕಿದ್ದಾರೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ದೂರುದಾರ ಶ್ರೀನಿವಾಸ್ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದಾರೆ. 2017ರಲ್ಲಿ ಅವರ ಕಚೇರಿ ಮೇಲೆ ದಾಳಿ ನಡೆದಿತ್ತು. ಆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿತ್ತು. ಈಗ ಪುನಃ ಘಟನೆ ನಡೆದಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.