ಬೆಂಗಳೂರು: ಹೃದಯಾಘಾತದಿಂದ ಉಂಟಾಗುತ್ತಿರುವ ಅಕಾಲಿಕ ಸಾವು ತಡೆಯಲು ಮುಂದಾಗಿರುವ ಆರೋಗ್ಯ ಇಲಾಖೆ, ‘ಆರೋಗ್ಯ ಕವಚ 108’ ಆಂಬುಲೆನ್ಸ್ ಸೇವೆಯ ಮೂಲಕ ವ್ಯಕ್ತಿಗೆ ಎದೆನೋವು ಕಾಣಿಸಿಕೊಂಡ ಒಂದು ಗಂಟೆಯೊಳಗೆ ಚಿಕಿತ್ಸೆ ಒದಗಿಸಲು ಯೋಜನೆ ರೂಪಿಸಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ‘ಸ್ಟೆಮಿ’ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಗಳೂರು, ಮೈಸೂರು ಹಾಗೂ ಕಲಬುರ್ಗಿ ಘಟಕವನ್ನು ಕಾರ್ಯಾಚರಣೆಯ ಕೇಂದ್ರಗಳನ್ನಾಗಿ ಬಳಸಿಕೊಂಡು, ಸೇವೆ ನೀಡಲಾಗುತ್ತದೆ. ವ್ಯಕ್ತಿಗೆ ಎದೆನೋವು ಕಾಣಿಸಿಕೊಂಡ ಕೂಡಲೇ ಆರೋಗ್ಯ ಕವಚ 108ಕ್ಕೆ ಕರೆ ಮಾಡಿದರೆ, ತರಬೇತಿ ಪಡೆದ ವೈದ್ಯರು ಹಾಗೂ ಸಿಬ್ಬಂದಿಯೊಂದಿದೆ ಸ್ಥಳಕ್ಕೆ ಆಂಬುಲೆನ್ಸ್ ಬರಲಿದೆ. ಇಸಿಜಿ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲು ಬೇಕಾದ ಸ್ಟೆಮಿ ಕಿಟ್ ಆಂಬುಲೆನ್ಸ್ಗಳಲ್ಲಿ ಇರಲಿವೆ.
ಸಾಂಕ್ರಾಮಿಕವಲ್ಲದ ರೋಗಗಳನ್ನು ಎದುರಿಸುತ್ತಿರುವವರಿಗೆ ಕೋವಿಡ್ ಹೆಚ್ಚಿನ ಅಪಾಯ ಉಂಟು ಮಾಡುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಬಹುತೇಕರು ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳುಳ್ಳವರಾಗಿದ್ದಾರೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ ವರ್ಷ ಸಾಂಕ್ರಾಮಿಕವಲ್ಲದ ರೋಗ ಕ್ಲಿನಿಕ್ಗಳಲ್ಲಿ (ಎನ್ಸಿಡಿ) 36 ಲಕ್ಷ ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಹಲವರಿಗೆ ಹೃದಯ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ, ಹೃದಯಾಘಾತಕ್ಕೆ ಒಳಗಾದವರಿಗೆ ನಿಗದಿತ ಅವಧಿಯೊಳಗೆ ತುರ್ತು ಚಿಕಿತ್ಸೆ ಒದಗಿಸಿ, ಪ್ರಾಣಾಪಾಯದಿಂದ ಪಾರು ಮಾಡಲು ಇಲಾಖೆ ಕಾರ್ಯಪ್ರವೃತ್ತವಾಗಿದೆ.
ಒಂದು ಗಂಟೆಯ ಪ್ರಕ್ರಿಯೆ: ‘ಎದೆನೋವು ಕಾಣಿಸಿಕೊಂಡ ಬಳಿಕ ಹೃದಯಾಘಾತವಾಗುವ ಸಾಧ್ಯತೆ ಇರುತ್ತದೆ. ಶುಲ್ಕರಹಿತ ಸಂಖ್ಯೆಗೆ ಕರೆ ಮಾಡಿದರೆ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಅಲ್ಲಿಯೇ ಇಸಿಜಿ ನಡೆಸಲಿದ್ದಾರೆ. ಅದರ ಫಲಿತಾಂಶವನ್ನು ಆನ್ಲೈನ್ ಮೂಲಕ ಹೃದ್ರೋಗ ತಜ್ಞರಿಗೆ ಕಳುಹಿಸಲಾಗುತ್ತದೆ. ಹೃದಯಾಘಾತ ಎಂದಾದರೆ ಹೆಚ್ಚಿನ ಚಿಕಿತ್ಸೆ ಎಲ್ಲಿ ನೀಡಬೇಕು ಎಂದು ವೈದ್ಯರು ಸೂಚಿಸುತ್ತಾರೆ. ಈ ಎಲ್ಲ ಪ್ರಕ್ರಿಯೆಗಳು ಒಂದು ಗಂಟೆಯೊಳಗೆ ನಡೆಯಲಿವೆ’ ಎಂದು ಸಾಂಕ್ರಾಮಿಕವಲ್ಲದ ರೋಗಗಳ ವಿಭಾಗದ ಉಪನಿರ್ದೇಶಕ ಡಾ. ರಂಗಸ್ವಾಮಿ ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.