ADVERTISEMENT

ಪಾಲಿಕೆಯ ಮಾಜಿ ಸದಸ್ಯರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 20:33 IST
Last Updated 10 ನವೆಂಬರ್ 2021, 20:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಕಳಪೆ ಕಾಮಗಾರಿಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ. ಅವು ಅಮಾಯಕರ ಜೀವ ಬಲಿ ಪಡೆಯುತ್ತಿವೆ. ಇದಕ್ಕೆ ಕಾರಣರಾಗಿರುವ ಪಾಲಿಕೆಯ ಮಾಜಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವ ಅಭಿಯಾನ ಕೈಗೊಳ್ಳಲಾಗಿದೆ. ಈವರೆಗೆ ಪಾಲಿಕೆಯ 30ಕ್ಕೂ ಹೆಚ್ಚು ಮಾಜಿ ಸದಸ್ಯರ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ನೀಡಲಾಗಿದೆ’ ಎಂದುಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ‘ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿರುವ ಗುಂಡಿಗಳ ಬಗ್ಗೆ ಜನರೇ ಪಕ್ಷಕ್ಕೆ ಮಾಹಿತಿ ನೀಡುತ್ತಿದ್ದಾರೆ. ಅದನ್ನು ಆಧರಿಸಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಗುಂಡಿಗಳಿಗೆ ಕಾರಣರಾದವರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸುತ್ತಿದ್ದಾರೆ. ಇನ್ನು ಹತ್ತು ದಿನದೊಳಗೆ ನಗರದ ರಸ್ತೆಗಳೆಲ್ಲಾ ಗುಂಡಿ ಮುಕ್ತವಾಗಬೇಕು. ಇಲ್ಲದಿದ್ದರೆ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದು ಎಚ್ಚರಿಸಿದರು.

‘ಜನರು ರಸ್ತೆಹಾಗೂ ಆಸ್ತಿ ತೆರಿಗೆಗಳನ್ನು ಕಟ್ಟುತ್ತಾರೆ. ರಸ್ತೆ ದುರಸ್ತಿಗಾಗಿ ಸರ್ಕಾರದ ಬೊಕ್ಕಸದಿಂದ ಕೋಟ್ಯಂತರ ಮೊತ್ತ ಖರ್ಚಾಗಿದ್ದರೂ ಗುಂಡಿಗಳು ಕಡಿಮೆಯಾಗಲಿಲ್ಲ. ಸರ್ಕಾರದ ಹಣವೆಲ್ಲಾ ಜನಪ್ರತಿನಿಧಿಗಳು, ಗುತ್ತಿಗೆದಾರರ ಪಾಲಾಗುತ್ತಿದೆ’ ಎಂದು ಆರೋ‍ಪಿಸಿದರು.

ADVERTISEMENT

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ,ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ , ಮುಖಂಡರಾದ ಜಗದೀಶ್ ಚಂದ್ರ, ಗೋಪಿನಾಥ್, ಸುಹಾಸಿನಿ, ಅಶೋಕ್ ಮೃತ್ಯುಂಜಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.