ADVERTISEMENT

ಮಹಿಳೆ ಗೌರವಕ್ಕೆ ಧಕ್ಕೆ: ಮುಖ್ಯಮಂತ್ರಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 19:54 IST
Last Updated 19 ನವೆಂಬರ್ 2018, 19:54 IST

ಬೆಂಗಳೂರು: ‘ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ರೈತ ಮಹಿಳೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂದು ಒತ್ತಾಯಿಸಿ ‘ಕರ್ನಾಟಕ‌ ಕಾರ್ಮಿಕ ಕಲ್ಯಾಣ ಪರಿಷತ್’ ಪದಾಧಿಕಾರಿಗಳು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಾನವ ಹಕ್ಕು ಆಯೋಗಕ್ಕೆ ಸೋಮವಾರ ದೂರು ಸಲ್ಲಿಸಿದ್ದಾರೆ.

‘ಕಬ್ಬಿನ ಬಾಕಿ ಹಣ ಪಾವತಿಗಾಗಿ ನಡೆದ ಪ್ರತಿಭಟನೆಯಲ್ಲಿ ಮಹಿಳೆಯೂ ಭಾಗಿಯಾಗಿದ್ದರು. ಆ ಮಹಿಳೆ ಬಗ್ಗೆ ಬೆಂಗಳೂರಿನ ಕೃಷಿ ಮೇಳದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ, ‘ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದಮ್ಮ’ ಎಂದು ಹೇಳಿಕೆ ನೀಡುವ ಮೂಲಕ ಮಹಿಳೆಯ ಗೌರವಕ್ಕೆ ಧಕ್ಕೆ ತಂದಿದ್ದಾರೆ’ ಎಂದು ಪದಾಧಿಕಾರಿಗಳು ಆರೋಪಿಸಿದ್ದಾರೆ.

‘ಉದ್ದೇಶಪೂರ್ವಕವಾಗಿ ಶಾಂತಿ ಕದಡುವುದು(ಐಪಿಸಿ 504) ಹಾಗೂ ಅಶ್ಲೀಲ ಸಂಜ್ಞೆ ಮೂಲಕ ಮಹಿಳೆ ಗೌರವಕ್ಕೆ ಧಕ್ಕೆ ತಂದ (ಐಪಿಸಿ 509) ಆರೋಪದಡಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.