ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಮೂಲಕ ಸರ್ಕಾರ ರಾಜ್ಯದ ರೈತರನ್ನು ಆತ್ಮಹತ್ಯೆಗೆ ದೂಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಜಲಸಂರಕ್ಷಣಾ ಸಮಿತಿಯ ಸದಸ್ಯರು ಭಾನುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ‘ಆತ್ಮಹತ್ಯೆಯ ಅಣಕು’ ಪ್ರದರ್ಶನ ನಡೆಸಿ ಪ್ರತಿಭಟಿಸಿದರು.
ಸಮಿತಿಯ ರಾಜ್ಯ ಸಂಚಾಲಕ ಕುರುಬೂರು ಶಾಂತಕುಮಾರ್, ‘ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರನ್ನು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಮಂಡಳಿಯ ಅವೈಜ್ಞಾನಿಕ ಆದೇಶದಿಂದ ಕರ್ನಾಟಕದ ರೈತರಿಗೆ ಸಂಕಷ್ಟ ಎದುರಾಗಿದೆ. ಇದೇ 9 ಮತ್ತು 10ರಂದು ಸಮಿತಿಯ ನಿಯೋಗವು ದೆಹಲಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲಿದೆ. ರಾಷ್ಟ್ರಪತಿ ಭೇಟಿಗೆ ಸಮಯ ಕೇಳಲಾಗಿದ್ದು, ಅನುಮತಿ ದೊರೆತರೆ ಭೇಟಿ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.
‘ಕೇಂದ್ರ ಬರ ಅಧ್ಯಯನ ತಂಡ ಕೆಲವು ಜಿಲ್ಲೆಗಳಲ್ಲಿ ಕಾಟಾಚಾರಕ್ಕೆ ಬರ ವೀಕ್ಷಣೆ ಮಾಡುತ್ತಿದೆ. ರೈತರ ಸಂಕಷ್ಟಗಳನ್ನು ಕೇಳುತ್ತಿಲ್ಲ. ರಾಜ್ಯದ 195 ತಾಲ್ಲೂಕುಗಳಲ್ಲಿ ಬರ ಎದುರಾಗಿದ್ದು, ಸುಮಾರು 40 ಲಕ್ಷ ಹೆಕ್ಟರ್ನಲ್ಲಿ ₹30 ಸಾವಿರ ಕೋಟಿ ನಷ್ಟವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾಗಳು ಭಿಕ್ಷೆಯ ರೂಪದಲ್ಲಿ ಪರಿಹಾರ ನೀಡುತ್ತಿವೆ’ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.