ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಡಿ ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಮೇಯರ್ ಆರ್. ಸಂಪತ್ರಾಜ್ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯಾದ ಮಾಜಿ ಕಾರ್ಪೋರೇಟರ್ ಜಾಕೀರ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
‘ರಾಜಕೀಯ ವೈಷಮ್ಯದಿಂದಾಗಿ ಸಂಪತ್ರಾಜ್, ಜಾಕೀರ್ ಹಾಗೂ ಇತರರು ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದರು. ಈ ಸಂಗತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ಕೆಲ ದಿನ ಸಂಪತ್ರಾಜ್ ಹಾಗೂ ಜಾಕೀರ್ ಒಂದೇ ಸ್ಥಳದಲ್ಲಿ ಉಳಿದುಕೊಂಡಿದ್ದರು. ಈ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.
ಅಮಾಯಕರೆಂದು ವಾದ: ‘ಪ್ರಕರಣ ಸಂಬಂಧ ಸಂಪತ್ರಾಜ್ ವಿಚಾರಣೆಯಲ್ಲಿ ಯಾವುದೇ ಮಾಹಿತಿ ನೀಡುತ್ತಿಲ್ಲ. ತಾವು ಅಮಾಯಕರು. ತಮ್ಮ ರಾಜಕೀಯ ಭವಿಷ್ಯ ಮುಗಿಸಲು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬುದಾಗಿ ಸಂಪತ್ರಾಜ್ ವಾದಿಸುತ್ತಿದ್ದಾರೆ. ಪುರಾವೆಗಳ ಸಮೇತ ಪ್ರಶ್ನಿಸಿದಾಗ, ಉತ್ತರಿಸದೇ ಮೌನವಾಗುತ್ತಿದ್ದಾರೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.