
ಬೆಂಗಳೂರು: ‘ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ‘ಎಚ್ಪಿವಿ’ ಲಸಿಕೆ ಸಹಕಾರಿಯಾಗಿದೆ. ಪ್ರಥಮ ಹಂತದಲ್ಲಿ ಗಣಿಬಾಧಿತ ಪ್ರದೇಶ ಮತ್ತು ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣು ಮಕ್ಕಳಿಗೆ ಈ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರ್ಟಿಸ್ಟ್ ಫಾರ್ ಹರ್ ಸಂಸ್ಥೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನಾ ಅಭಿಯಾನ’ಕ್ಕೆ ಚಾಲನೆ ನೀಡಿ, ಮಾತನಾಡಿದರು.
‘ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಎಚ್ಪಿವಿ ಲಸಿಕೆ ಸಹಕಾರಿ. ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಈ ಲಸಿಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಕಾರ್ಯಗತವಾಗುವ ವಿಶ್ವಾಸವಿದೆ. ನವದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯದಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿಯೂ ಈ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆಗೆ ಚರ್ಚಿಸಿ, ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ’ ಎಂದರು.
‘ಪ್ರಾಥಮಿಕ ಹಂತದಲ್ಲೇ ಕಾನ್ಸರ್ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಮೂಲಕ ರೋಗವನ್ನು ಗುಣಪಡಿಸಬಹುದಾಗಿದೆ. ಆದರೆ, ಹಿಂಜರಿಕೆ, ಭಯದ ಕಾರಣ ಅನೇಕ ಮಹಿಳೆಯರು ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ. ಆದ್ದರಿಂದ ‘ಗೃಹ ಆರೋಗ್ಯ’ ಯೋಜನೆಯಡಿಯೂ ಕ್ಯಾನ್ಸರ್ ಪತ್ತೆಗೆ ಆದ್ಯತೆ ನೀಡಲಾಗುತ್ತದೆ. ಸ್ತನ, ಗರ್ಭಕಂಠ ಮತ್ತು ಬಾಯಿ ಕ್ಯಾನ್ಸರ್ ಪ್ರಕರಣವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ, ಚಿಕಿತ್ಸೆಗೂ ಕ್ರಮವಹಿಸಲಾಗುವುದು’ ಎಂದು ಹೇಳಿದರು.
ಆರ್ಟಿಸ್ಟ್ ಫಾರ್ ಹರ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಹೇಮಾ ದಿವಾಕರ್, ‘ವಿವಿಧ ಸಂಘಟನೆಗಳ ನೆರವಿನಿಂದ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಶ್ರಮಿಸಲಾಗುತ್ತಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಎಚ್ಡಿಆರ್ ಫೌಂಡೇಷನ್ ವತಿಯಿಂದ ರಾಜ್ಯದ ವಿವಿಧೆಡೆ 4,560 ಹೆಣ್ಣು ಮಕ್ಕಳಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.