ಬೆಂಗಳೂರು: ಮಹಿಳೆಯೊಬ್ಬರ ಚಿನ್ನದ ಸರ ಕದ್ದು ಪರಾರಿಯಾಗುತ್ತಿದ್ದ ವೇಳೆ ದ್ವಿಚಕ್ರ ವಾಹನದಿಂದ ಬಿದ್ದು ಗಾಯಗೊಂಡಿದ್ದ ಕಳ್ಳನೊಬ್ಬ ಹೊಯ್ಸಳ ವಾಹನ ಬರುತ್ತಿದ್ದಂತೆ ಸ್ಥಳದಿಂದ ಓಡಿ ಹೋಗಿದ್ದಾನೆ.
ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
‘ಬೌನ್ಸ್ ಕಂಪನಿಯ ಬಾಡಿಗೆ ದ್ವಿಚಕ್ರ ವಾಹನದಲ್ಲಿ ಬೃಂದಾವನ್ ಲೇಔಟ್ಗೆ ಇದೇ 12ರಂದು ರಾತ್ರಿ ಬಂದಿದ್ದ ಮೂವರು ದುಷ್ಕರ್ಮಿಗಳು, ಸ್ಥಳೀಯ ನಿವಾಸಿ ಸುಧಾ ಎಂಬುವರ ಚಿನ್ನದ ಸರ ಕಿತ್ತುಕೊಂಡಿದ್ದರು. ಮಹಿಳೆ ಚೀರಾಡುತ್ತಿದ್ದಂತೆ ಸಹಾಯಕ್ಕೆ ಬಂದಿದ್ದ ಸ್ಥಳೀಯರು, ದುಷ್ಕರ್ಮಿಗಳಿದ್ದ ವಾಹನವನ್ನು ಬೆನ್ನಟ್ಟಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.
‘ದ್ವಿಚಕ್ರ ವಾಹನವನ್ನು ವೇಗವಾಗಿ ಓಡಿಸಿದ್ದರಿಂದಾಗಿ ಹಿಂಬದಿ ಕುಳಿತಿದ್ದ ಕಳ್ಳನೊಬ್ಬ ಕೆಳಗೆ ಬಿದ್ದು ಗಾಯಗೊಂಡಿದ್ದ. ಆತನನ್ನು ಅಲ್ಲಿಯೇ ಬಿಟ್ಟು ಇನ್ನಿಬ್ಬರು ಸ್ಥಳದಿಂದ ಹೊರಟು ಹೋಗಿದ್ದರು. ಅಷ್ಟರಲ್ಲೇ ಗಸ್ತಿನಲ್ಲಿದ್ದ ಹೊಯ್ಸಳ ವಾಹನ ಸ್ಥಳಕ್ಕೆ ಬಂದಿತ್ತು. ಅದನ್ನು ಕಂಡ ಗಾಯಾಳು ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.