ಬಂಧನ
ಬೆಂಗಳೂರು: ನಗರದ 11 ಕಡೆಗಳಲ್ಲಿ ಮಹಿಳೆಯರ ಸರಗಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಲಗ್ಗೆರೆಯ ಎಂ.ಶಶಿಧರ್ (37) ಹಾಗೂ ನೆಲಗೆದರನಹಳ್ಳಿಯ ಕೆ.ಅಭಿಷೇಕ್ (22) ಬಂಧಿತರು. ಇವರಿಂದ ₹ 22.50 ಲಕ್ಷ ಮೌಲ್ಯದ 365 ಗ್ರಾಂ ಚಿನ್ನಾಭರಣ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಫೆ.15ರಂದು ರಾತ್ರಿ ಅಂಗಡಿಯಿಂದ ಮನೆಗೆ ಹೊರಟಿದ್ದ ಮಹಿಳೆಯನ್ನು ಹಿಂಬಾಲಿಸಿದ್ದ ಆರೋಪಿಗಳು, ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು’ ಎಂದರು.
ನಕಲಿ ನೋಂದಣಿ ಸಂಖ್ಯೆ ಫಲಕ: ‘ಕೆಂಗೇರಿ ಬಳಿ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳು, ಅದಕ್ಕೆ ನಕಲಿ ನೋಂದಣಿ ಸಂಖ್ಯೆ ಫಲಕ ಅಳವಡಿಸಿದ್ದರು. ಅದೇ ಬೈಕ್ನಲ್ಲಿ ಸುತ್ತಾಡಿ ಕಳ್ಳತನ ಮಾಡುತ್ತಿದ್ದರು. ಇತ್ತೀಚೆಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡರು’ ಎಂದು ಪೊಲೀಸರು ತಿಳಿಸಿದರು.
‘ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಹಿಂಬಾಲಿಸುತ್ತಿದ್ದ ಆರೋಪಿಗಳು, ಚಿನ್ನದ ಸರ ಕಿತ್ತುಕೊಂಡು ಬೈಕ್ನಲ್ಲಿ ಪರಾರಿಯಾಗುತ್ತಿದ್ದರು. ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಆರೋಪಿಗಳು ಚಿನ್ನದ ಸರ ಕಳ್ಳತನ ಮಾಡಿದ್ದರು. ಜೊತೆಗೆ, ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದರು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.